ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣೆಯ ಹೊಂದಾಣಿಕೆಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಈ ಪಾಪರ್ ಸರ್ಕಾರದ ಬಳಿ ಬರ ಪರಿಹಾರ ನೀಡಲು ಹಣವಿಲ್ಲ. ಆದರೆ ನೀರನ್ನು ಮಾತ್ರ ನೀಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು ಹರಿಸಿದೆ. ರೈತರು ಹೋರಾಟ ಮಾಡುತ್ತಿದ್ದಾರೆ, ಜನರು ಖಾಲಿ ಬಿಂದಿಗೆ ಹಿಡಿದುಕೊಂಡು ಬೀದಿಗಿಳಿದಿದ್ದಾರೆ, ಬೆಂಗಳೂರಿನಲ್ಲಿ ನೀರಿಗೆ ಕೊರತೆಯಾಗಿದೆ. ಇಷ್ಟಾದರೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಾರೆ ಎಂದರೆ ಇಂತಹ ನಾಚಿಕೆಗೆಟ್ಟ ಸರ್ಕಾರ ಇತಿಹಾಸದಲ್ಲೇ ಇಲ್ಲ ಎನ್ನಬೇಕು. ನಮ್ಮ ಕುಡಿಯುವ ನೀರನ್ನು ಚುನಾವಣಾ ಹೊಂದಾಣಿಕೆಗಾಗಿ ಬಿಟ್ಟುಕೊಡುತ್ತಾರೆ. ಈಗಾಗಲೇ ಓಟಿಗಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡಿದ್ದಾರೆ. ಈಗ ಹೊಂದಾಣಿಕೆಗಾಗಿ ರಾಜ್ಯಕ್ಕೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ ಎಂದು ಹೇಳಿದರು.
ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆಂದು ಹೋರಾಟ ಮಾಡಿ, ಈಗ ಕೇಂದ್ರ ಸರ್ಕಾರ ಮಾಡಬೇಕು ಎನ್ನುತ್ತಿದ್ದಾರೆ. ಆಯವ್ಯದಲ್ಲಿ ಮೇಕೆದಾಟು ಯೋಜನೆಗೆ ನಯಾ ಪೈಸೆ ನೀಡಿಲ್ಲ. ಇವರಿಗೆ ಮಾನವಿದ್ದರೆ 10 ಸಾವಿರ ಕೋಟಿ ರೂಪಾಯಿಯನ್ನು ಈ ಯೋಜನೆಗೆ ಮೀಸಲಿಡಬೇಕಿತ್ತು. ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಮಾನವನ್ನು ತೆಗೆದಿದ್ದು, ಜನರಿಗೆ ಕಲುಷಿತ ನೀರು ನೀಡಲಾಗುತ್ತಿದೆ. ಖಜಾನೆಯನ್ನು ಲೂಟಿ ಹೊಡೆಯುವುದರಲ್ಲಿ ಎಲ್ಲರೂ ನಿರತರಾಗಿದ್ದಾರೆ ಎಂದರು.