ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆಗಳು STI ತನಿಖೆಯ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿಭಟನೆಗಳು ಅಲ್ಲಲ್ಲಿ ನಡೆಯುತ್ತವೆ. ಅವುಗಳನ್ನು ಸ್ಥಳೀಯ ಪೊಲೀಸರು ನೋಡಿಕೊಳ್ಳುತ್ತಾರೆ. ನಮ್ಮ ತನಿಖೆ ಕ್ರಮಬದ್ಧವಾಗಿ, ವೈಜ್ಞಾನಿಕವಾಗಿ ನಡೆಯಲಿದೆ. ಎಸ್ ಐ ಟಿಗೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಸತ್ಯಾಸತ್ಯತೆ ತನಿಖೆಯಿಂದ ಹೊರ ಬರುತ್ತದೆ. ಹೊರಗೆ ನಡೆಯುತ್ತಿರುವ ಪ್ರತಿಭಟನೆಗಳು ಎಸ್ ಐ ಟಿ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೆನಪಿನ ಶಕ್ತಿ ಕಡಿಮೆ ಇದೆ. ಅವರು ಸಿಎಂ ಆಗಿದ್ದಾಗ ಅಂದಿನ ಸಚಿವ ಎಚ್ ವೈ ಮೇಟಿ ಸಿಡಿ ಪ್ರಕರಣದಲ್ಲಿ ಏನು ಮಾಡಿದ್ರು ಎಂಬುದು ಎಲ್ಲರಿಗೂ ಗೊತ್ತಿದೆ. ಪ್ರಕರಣವನ್ಮು ಸಿಐಡಿಗೆ ಕೊಟ್ಟು ಮೇಟಿ ಪ್ರಕರಣ ಮುಚ್ಚಿ ಹಾಜಿದರು. ಯುವತಿ ದೂರು ನೀಡಿದರೂ ಪ್ರಕರಣ ದಾಖಲಿಸಲಿಲ್ಲ. ಒಬ್ಬ ಅಧಿಕಾರಿಯೇ ವಿಚಾರಣೆ ಮಾಡಿ ಮೇಟಿ ಅವರಿಗೆ ಕ್ಲೀನ್ ಚಿಟ್ ನೀಡಿದರು ಎಂದು ಅವರು ಹೇಳಿದರು.
ಇದೇ ವಿಷಯವನ್ನು ಅಧಿವೇಶನದಲ್ಲಿ ಹೇಳಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.
ಸಿಡಿ ಯುವತಿಗೆ ರಕ್ಷಣೆ ನೀಡಲು ನಾವು ಈಗಲೂ ಬದ್ಧ. ಈಗಾಗಲೇ ಯುವತಿಗೆ ೫ ಬಾರಿ ನೋಟೀಸ್ ನೀಡಿದ್ದೇವೆ. ಯುವತಿ ಇರುವ ಕಡೆಗೇ ಹೋಗಿ ರಕ್ಷಣೆ ನೀಡುತ್ತೇವೆ. ಅವರ ಕುಟುಂಬ ಸದಸ್ಯರಿಗೆ ರಕ್ಷಣೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಯಾರೇ ಆಗಲಿ ಪೊಲೀಸರ ನೈತಿಕತೆಯನ್ನು ಕುಗ್ಗಿಸುವ ಕೆಲಸ ಮಾಡಬಾರದು. SIT ತಂಡ ಕ್ರಮಬದ್ಧವಾಗಿ ಸರಿ ಹಾದಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದ ಸತ್ಯ ಹೊರ ಬರಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
____
























































