ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಅಇಟಿವ್ ಪ್ರಕರಣಗಳು ಹೆಚ್ಚುತ್ತಲಿದೆ. ಕಳೆದ ನವೆಂಬರ್ ನಂತರ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿತ್ತು. ಇನ್ನೇನು ಕೊರೋನಾ ಸಂಕಟ ಸಮಯ ದೂರವಾಗುತ್ತಿದೆ ಎಂಬ ಆಶಾಭಾವನೆ ಮೂಡುವಾಗಲೇ ಮತ್ತೆ ಕೋವಿಡ್ ಅಟ್ಟಹಾಸ ಮುಂದುವರಿಯಿತು. ಇತ್ತೀಚಿನ ದಿನಗಳಲ್ಲಿ ಪಾಸಿಟಿವ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಎಚ್ಚರಿಕೆ ವಹಿಸಲು ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ.
ಇದೇ ವೇಳೆ, ಕೊರೊನಾ ಪ್ರಕರಣ ಬೆಂಗಳೂರಿನಲ್ಲಿ ಒಂದು ಸಾವಿರ ದಾಟಿದೆ. ಜನಸಾಮಾನ್ಯರು ಕೋವಿಡ್ ಸುರಕ್ಷತಾ ಕ್ರಮ ಪಾಲಿಸದಿದ್ದರೆ, ಆಪಾಯವಾಗುತ್ತದೆ. ಮನೆಯಲ್ಲಿರುವ ಹಿರಿಯ ನಾಗರಿಕರಿಗೆ ಲಸಿಕೆ ಕೊಡಿಸಬೇಕು. ಯುವಜನರು ಅನಗತ್ಯವಾಗಿ ಹೊರಗೆ ಸುತ್ತಾಡಬಾರದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮನವಿ ಮಾಡಿದ್ದಾರೆ.
ತಾಂತ್ರಿಕ ಸಲಹಾ ಸಮಿತಿ ನೀಡಿದ ವರದಿಗೆ ಸರ್ಕಾರ ಹಾಗೂ ಸಾರ್ವಜನಿಕರು ಸ್ಪಂದಿಸಬೇಕು. ಯಾವುದೇ ಚಟುವಟಿಕೆಗೆ ಕೊರೊನಾ ರಿಯಾಯಿತಿ ತೋರುವುದಿಲ್ಲ. ಸರ್ಕಾರ ತನ್ನ ಇತಿಮಿತಿಯಲ್ಲಿ ನಿಯಂತ್ರಣ ಮಾಡುತ್ತಿದೆ. ಜನರಿಗೆ ಕಷ್ಟವಾಗಬಾರದೆಂದು ಹೆಚ್ಚಿನ ನಿರ್ಬಂಧ ಹೇರಿಲ್ಲ. ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸರ್ವಪಕ್ಷ ಸಭೆ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಕೋರಲಾಗುವುದು. ಚುನಾವಣೆ ಸಮಯದಲ್ಲಿ ಇದು ಅಗತ್ಯ ಎಂದಿದ್ದಾರೆ.
ಗಡಿಭಾಗಗಳಲ್ಲಿ ಜನರ ಮೇಲೆ ನಿಗಾ ಇರಿಸಲಾಗಿದೆ. ಎಲ್ಲ ಜಿಲ್ಲೆಗಳಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.
































































