ಬೆಂಗಳೂರು: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿನ ಘಟನೆಗೆ ಸಂಬಂಧಿಸಿದಂತೆ ತಮ್ಮನ್ನು ಅಕ್ರಮವಾಗಿ ಬಂಧಿಸಿರುವ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ ವಿಧಾನಸರಿಷತ್ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ.
ಮಂಗಳವಾರ ಬೆಂಗಳೂರಿನಲ್ಲಿ ಪೊಲೀಸ್ ಮಹಾನಿರ್ದೇಶಕ ಮಹಾನಿರ್ದೇಶಕ ಅಲೋಕ್ ಮೋಹನ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿದ ಸಿ.ಟಿ.ರವಿ, ‘ನನ್ನ ಮೇಲೆ ದೌರ್ಜನ್ಯ ಎಸಗಲಾಗಿದೆ. ಬಂಧನದ ಸಂದರ್ಭದಲ್ಲಿ ಕಾನೂನು ಉಲ್ಲಂಘನೆ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಒತ್ತಾಯಿಸಿದರು.
ವಿಧಾನಪರಿಷತ್ನ ಘಟನೆ ವಿಚಾರದಲ್ಲಿ ಪೊಲೀಸರು ತಮ್ಮ ವ್ಯಾಪ್ತಿಯನ್ನು ಮೀರಿ ನಡೆದುಕೊಂಡಿದ್ದಾರೆ. ಪೊಲೀಸರು ಸುಪಾರಿ ಕೊಲೆಗಟುಗರ ರೀತಿಯಲ್ಲಿ ನನ್ನ ಜೊತೆಗೆ ನಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ಡಿಜಿಪಿಯವರ ಗಮನ ಸೆಳೆದಿರುವ ಸಿ.ಟಿ.ರವಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಂಬಲಿಗರು ನನ್ನ ಕೊಲೆ ಯತ್ನಕ್ಕೆ ಪ್ರಯತ್ನ ನಡೆಸಿದ್ದರು. ವಿಧಾನಪರಿಷತ್ ಸದಸ್ಯನಾದ ನನನ್ನು ನಕಲಿ ಎನ್ಕೌಂಟರ್ ಮೂಲಕ ಹತ್ಯೆ ಮಾಡುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ದೂರಿದ್ದಾರೆ.
ಸುವರ್ಣಸೌಧದ ಆವರಣದಿಂದ ತಮ್ಮನ್ನು ಕಿಡ್ನಾಪ್ ಮಾಡಲಾಗಿತ್ತು. ಬೆಳಗಾವಿ ಪೊಲೀಸರು ಡಿಸಿಎಂ ಡಿ.ಕೆ.ಶಿವಕುಮಾರ್ ಅಣತಿಯಂತೆ ಹಾಗೂ ಅವರ ಬಾಡಿಗೆ ಗೂಂಡಾಗಳಂತೆ ನಡೆದುಕೊಂಡಿದ್ದರು ಎಂದು ಆರೋಪಿಸಿರುವ ಶಾಸಕ ರವಿ, ಬೆಳಗಾವಿ ಪೊಲೀಸ್ ಕಮಿಷನರ್, ಜಿಲ್ಲಾ ಎಸ್ಪಿ ಸಹಿತ ಪೊಲೀಸ್ ಅಧಿಕಾರಿಗಳು ಎನ್ಕೌಂಟರ್ ಮೂಲಕ ನನ್ನನ್ನು ಮುಗಿಸಲು ಪ್ರಯತ್ನ ನಡೆಸಿದಂತಿತ್ತು. 17 ಗಂಟೆ ಅವಧಿಯಲ್ಲಿ 400 ಕಿ.ಮೀ. ಸುತ್ತಾಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಈ ವ್ಯಾಪ್ತಿ ಮೀರಿ ವರ್ತಿಸಿರುವ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ರವಿ ಅವರು ಪೊಲೀಸ್ ಮಹಾನಿರ್ದೇಶಕರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.