ಬೆಂಗಳೂರು: ಸಿಎಂ ವಿರುದ್ದ ಸಚಿವ ಈಶ್ವರಪ್ಪ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎನ್ನಲಾದ ಬೆಳವಣಿಗೆ ಮುಂದಿಟ್ಟು ರಾಜ್ಯ ಸರ್ಕಾರವನ್ನು ಪ್ರತಿಪಕ್ಷ ಕಾಂಗ್ರೆಸ್ ಗೇಲಿ ಮಾಡತೊಡಗಿದೆ.
ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದಾರಾಮಯ್ಯ ರಾಜ್ಯ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ ಎಂದು ವಿಶ್ಲೇಷಿಸಿರುವ ಸಿದ್ದರಾಮಯ್ಯ, ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ದರಾಗಿ ಉಳಿಯಬೇಕು ಎಂದಿರುವ ಅವರು, ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸುವುದಾಗಿ ಹೇಳಿದ್ದಾರೆ.
ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂದಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ಮೋದಿ ಮತ್ತು ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, ಈ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರ ತನ್ನ ಸಂಶೋಧನೆ ಮೂಲಕ ಬಹಿರಂಗ ಗೊಳಿಸಿದ್ದಾರೆ ಎಂದು ಬಣ್ಣಿಸಿರುವ ಸಿದ್ದರಾಮಯ್ಯ, ನಮ್ಮ ಸರ್ಕಾರ 10% ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಮಂತ್ರಿಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ ನೀವೇ ರಾಜ್ಯಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ ಎಂದು ವ್ಯಂಗ್ಯವಾಡಿದ್ದಾರೆ.