ಬೆಂಗಳೂರು: ಹೋಟೆಲ್, ಮೆಡಿಕಲ್ ಸ್ಟೋರ್ ಸೇರಿದಂತೆ ಸಾರ್ವಜನಿಕರು ಭೇಟಿ ನೀಡುವ ಸ್ಥಳಗಳಲ್ಲಿ QR ಕೋಡ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. QR ಕೋಡ್ ಸ್ಕ್ಯಾನ್ ಮಾಡುವ ಮೂಲಕ ಆಹಾರದ ಗುಣಮಟ್ಟ, ಸೇವೆ ಸೇರಿದಂತೆ ಯಾವುದೇ ಸಮಸ್ಯೆಗಳ ಕುರಿತು ಸಾರ್ವಜನಿಕರು ನೇರವಾಗಿ ದೂರು ಸಲ್ಲಿಸಬಹುದಾಗಿದೆ ಎಂದರು.
ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆಯ ಕಾರ್ಯಾಚರಣೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಅಧಿಕಾರಿಗಳ ಗಮನಕ್ಕೆ ತರುವ ಉದ್ದೇಶದಿಂದ ಈ ವ್ಯವಸ್ಥೆ ರೂಪಿಸಲಾಗುತ್ತಿದೆ. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಇಂತಹ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಹೇಳಿದರು.
ಬೆಂಗಳೂರಿನ ಹೋಟೆಲ್ಗಳ ಮೇಲಿನ ತಪಾಸಣೆ ಮುಂದುವರಿಯಲಿದ್ದು, ಖಾಸಗಿ ಹಾಸ್ಟೆಲ್, ಪಿಜಿ, ಬಸ್ ನಿಲ್ದಾಣ, ಮದುವೆ ಮನೆ, ರೈಲ್ವೆ ಕ್ಯಾಂಟೀನ್ ಹಾಗೂ ವಿಮಾನಗಳಲ್ಲಿ ನೀಡುವ ಆಹಾರವನ್ನೂ ಪರಿಶೀಲಿಸಲಾಗುವುದು ಎಂದು ಖಾದರ್ ತಿಳಿಸಿದರು.

ಪಿಜಿಗಳಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪಿಜಿ ಮಾಲೀಕರು ಅಲ್ಲಿ ವಾಸಿಸುವ ವಿದ್ಯಾರ್ಥಿಗಳು ಹಾಗೂ ಯುವಜನರನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳಬೇಕು. ಆಹಾರ ಸುರಕ್ಷತಾ ನಿಯಮ ಉಲ್ಲಂಘಿಸಿದರೆ ಪಿಜಿ ಮುಚ್ಚುವ ಕ್ರಮಕ್ಕೂ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇತ್ತೀಚೆಗೆ ಬೆಂಗಳೂರಿನಲ್ಲಿ 60ಕ್ಕೂ ಹೆಚ್ಚು 3-ಸ್ಟಾರ್ ಮತ್ತು 5-ಸ್ಟಾರ್ ಹೋಟೆಲ್ಗಳು, 8 ಗೋಡೌನ್ಗಳು ಹಾಗೂ 4 ರೆಸ್ಟೋರೆಂಟ್ಗಳಲ್ಲಿ ತಪಾಸಣೆ ನಡೆಸಲಾಗಿದೆ. 30 ತಂಡಗಳನ್ನು ರಚಿಸಿ ಆಹಾರ ಸಂಗ್ರಹಣೆ, ಗುಣಮಟ್ಟ ಮತ್ತು ಸುರಕ್ಷತಾ ನಿಯಮಗಳ ಪಾಲನೆಯನ್ನು ಪರಿಶೀಲಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಮುಂದಿನ ದಿನಗಳಲ್ಲಿ ತಳಮಟ್ಟದಿಂದಲೇ ಆಹಾರ ಸುರಕ್ಷತೆ ಖಚಿತಪಡಿಸುವುದು ಇಲಾಖೆಯ ಉದ್ದೇಶವಾಗಿದೆ ಎಂದು ಖಾದರ್ ಹೇಳಿದರು.







































































