ಮಂಗಳೂರು: ಬಂದರು ನಗರಿ ಮಂಗಳೂರಿನ ಖಾಸಗಿ ಶಾಲಾ ಶಿಕ್ಷಕಿಯೊಬ್ಬರು ಅಯೋಧ್ಯಾ ರಾಮ ಮಂದಿರ ಹಾಗೂ ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆಂಬ ಸುದ್ದಿ ಕರಾವಳಿ ಜಿಲ್ಲೆಗಳಲ್ಲಿ ಆಕ್ರೋಶದ ಏಲ್ ಎಬ್ಬಿಸಿದೆ. ಶಿಕ್ಷಕಿ ವಿರುದ್ಧ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿದ ಘಟನೆಯೂ ನಡೆದಿದೆ.
ಖಾಸಗಿ ಶಾಲೆಯ ಏಳನೇ ತರಗತಿ ಮಕ್ಕಳಿಗೆ ವರ್ಕ್ ಈಸ್ ವರ್ಶಿಪ್ ಎನ್ನುವ ಪಠ್ಯವಿದ್ದು, ಈ ಪಾಠದ ನೆಪದಲ್ಲಿ ಬೋಧನೆ ಮಾಡುವ ಸಂದರ್ಭದಲ್ಲಿ ಶ್ರೀರಾಮನನ್ನು ಅವಹೇಳನ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ.
ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಹಿಂದು ಸಂಘಟನೆ ಕಾರ್ಯಕರ್ತರು ಶಾಲೆ ಬಳಿ ಧಾವಿಸಿ ಆಕ್ರೋಶ ಹೊರಹಾಕಿದ್ದಾರೆ. ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಮಾಜಿ ಶಾಸಕ ಐವಾನ್ ಡಿಸೋಜ, ಪ್ರಕರಣ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕ್ಕೆ ಸೂಚಿಸುವುದಾಗಿ ಹೇಳಿದ್ದಾರೆ.