ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ವತಿಯಿಂದ ಮಲ್ಲೇಶ್ವರಂನ ಶ್ರೀ ಯದುಗಿರಿ ಯತಿರಾಜ ಮಠದ ಶ್ರೀ ರಾಮಾನುಜ ಸಂಸ್ಕೃತಿ ಭವನದಲ್ಲಿ ನಡೆಯಲಿರುವ ಶನಿವಾರ ಪತ್ರಿಕಾ ದಿನಾಚರಣೆಯನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.
ಮಾಧ್ಯಮ ಕ್ಷೇತ್ರದಲ್ಲಿನ ಅವಿಸ್ಮರಣೀಯ ಸೇವೆಗಾಗಿ 2023ನೇ ಸಾಲಿನ ‘ಮಾಧ್ಯಮ ಸೇವಾ ರತ್ನ ಪ್ರಶಸ್ತಿ’ಗೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಈಶ್ವರ್ ಅವರಿಗೆ ಮಾಧ್ಯಮ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.
ಬೆಂಗಳೂರು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರು ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಡಾ.ಬಿ.ಕೆ.ರವಿ ಅವರ ಮಾರ್ಗದರ್ಶನದಲ್ಲಿ (ಪಿಎಚ್.ಡಿ) ಸಂಶೋಧನೆ ಮಾಡುತ್ತಿರುವ ಈಶ್ವರ್ ಅವರನ್ನು ಮಾಧ್ಯಮ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷರು ಹಾಗೂ ಹಿರಿಯ ಪತ್ರಕರ್ತರು (ಸ್ಟಾರ್ ಆಫ್ ಬಳ್ಳಾರಿ) ಪತ್ರಿಕೆಯ ಪ್ರಧಾನ ಸಂಪಾದಕರಾದ ಬಂಗ್ಲೆ ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ (ಜುಲೈ 01ರಂದು) ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಪತ್ರಿಕಾ ಸೇವಾಕರ್ತರಿಗೆ ಈ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.