ಕರಾವಳಿಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ, ರಾಜ್ಯಕ್ಕೆ ಕೇಂದ್ರ ಸರ್ಕಾರವು ಹೆಚ್ಚುವರಿಯಾಗಿ 30 ಲಕ್ಷ ಲೀಟರ್ ಸೀಮೆ ಎಣ್ಣೆಯನ್ನು ಬಿಡುಗಡೆ ಮಾಡಿದೆ..
ದೆಹಲಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆ ಎಣ್ಣೆ ಸಕಾಲದಲ್ಲಿ ಸಿಗುತ್ತಿಲ್ಲ, ಈ ಕುರಿತು ಕೇಂದ್ರ ಸರಕಾರದ ಗಮನವನ್ನು ಸೆಳೆದು ಹಂಚಿಕೆಯಾಗಿರುವ ಸೀಮೆ ಎಣ್ಣೆಯನ್ನು ತ್ವರಿತವಾಗಿ ಬಿಡುಗಡೆಗೊಳಿಸಬೇಕು, ಈ ಮೂಲಕ ಕರಾವಳಿಯ ಮೀನುಗಾರರ ಹಿತವನ್ನು ಕಾಯಬೇಕು ಎಂದು ಉಡುಪಿಯ ಮೀನುಗಾರರ ಒಕ್ಕೂಟ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರಿಗೆ ಮನವಿಯನ್ನು ಸಲ್ಲಿಸಿತ್ತು.
ಕರಾವಳಿಯ ಮೀನುಗಾರರ ಈ ಮನವಿಯನ್ನು ಕೇಂದ್ರ ಸಚಿವರು, ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆಯವರು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವರ ಗಮನಕ್ಕೆ ತಂದಿದ್ದಾರೆ. ಅತೀ ಶೀಘ್ರದಲ್ಲಿ ಹೆಚ್ಚುವರಿ ಸೀಮೆ ಎಣ್ಣೆಯನ್ನು ಕರ್ನಾಟಕ ರಾಜ್ಯಕ್ಕೆ ಬಿಡುಗಡೆಗೊಳಿಸಿ, ಕರಾವಳಿಯ ಮೀನುಗಾರರ ಹಿತವನ್ನು ಕಾಯುವಂತೆ ಕೇಳಿಕೊಂಡಿದ್ದಾರೆ.
ಈ ಹೆಚ್ಚುವರಿಯಾಗಿ ದೊರೆತಿರುವ ಸೀಮೆ ಎಣ್ಣೆಯನ್ನು ಮೀನುಗಾರಿಕಾ ಉದ್ದೇಶಕ್ಕೆ ರಾಜ್ಯದ ವಿತರಣಾ ವ್ಯವಸ್ಥೆಯು ವಿತರಿಸಲಿರುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಕರಾವಳಿಯ ಮೀನುಗಾರರ ಬೇಡಿಕೆಯನ್ನು ತ್ವರಿತವಾಗಿ ಈಡೇರಿಸಿ, ನಾಡ ದೋಣಿ ಮೀನುಗಾರಿಕೆಗೆ ಅಗತ್ಯವಿರುವ ಸೀಮೆ ಎಣ್ಣೆಯನ್ನು ಬಿಡುಗಡೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಪೆಟ್ರೋಲಿಯಂ ಸಚಿವರಿಗೆ, ಉಡುಪಿ-ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.