ಬೆಂಗಳೂರು: ರೇವಣ್ಣಗೆ ಸಿಗದ ರಿಲೀಫ್; ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯ ನಿರಾಕರಿಸಿದೆ.
ರೇವಣ್ಣ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಮಹಿಳೆಯ ಮಗ ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ದೂರು ನೀಡಿದ್ದ. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಮೊದಲ ಆರೋಪಿಯಾಗಿದ್ದಾರೆ.
ಈ ಪ್ರಕರಣದಲ್ಲಿ HD ರೇವಣ್ಣ ಪತ್ನಿ ಭವಾಣಿ ರೇವಣ್ಣ ಅವರ ಆಪ್ತ ಸತೀಶ್ ಎಂಬಾತ ಎರಡನೇ ಆರೋಪಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದರು. ಇದೇ ವೇಳೆ, ಬಂಧನ ಭೀತಿಯಲ್ಲಿರುವ ಹೆಚ್.ಡಿ. ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧೀಗಳ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ಕುರಿತಂತೆ ಶನಿವಾರ ವಿಚಾರಣೆ ನಡೆದ ಸಂದರ್ಭದಲ್ಲಿ ರೇವಣ್ಣ ಅವರ ವಕೀಲರು ವಾದ ಮಂಡಿಸಿ, ಮಹಿಳೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರ ಪಾತ್ರ ಇಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಈ ಪ್ರಕರಣದಲ್ಲಿ ತಾನು ಮುಗ್ದ ಎಂಬುದನ್ನು ಸಾಬೀತುಪಡಿಸಲು ರೇವಣ್ಣ ಅವರಿಗೆ ಅವಕಾಶ ಸಿಗಬೇಕು. ಹಾಗಾಗಿ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರೆ ರೇವಣ್ಣ ಅವರು ಕೂಡಲೇ ಎಸ್ಐಟಿ ಮುಂದೆ ಹಾಜರಾಗಲಿದ್ದಾರೆ ಎಂದು ಕೋರ್ಟ್ಗೆ ಮನವರಿಕೆ ಮಾಡಿದರು.
ಇದಕ್ಕೆ ಎಸ್ಐಟಿ ವಕೀಲ ಜಗದೀಶ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸಂತ್ರಸ್ತೆಯ ಪ್ರಾಣ ಉಳಿಸುವುದು ಮುಖ್ಯವಾಗಿದೆ ಎಂದು ಅವರು ನ್ಯಾಯಾಧೀಶರ ಗಮನಸೆಳೆದರು.
ವಾದ-ಪ್ರತಿವಾದ ಆಲಿಸಿದ ಆದೇಶ ಪ್ರಕಟಿಸಿದ ನ್ಯಾಯಾಧೀಶರು ಆರೋಪಿ ಹೆಚ್.ಡಿ.ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ನಿರಾಕರಿಸಿದರು.