ಹಾಸನ: ಜಿಲ್ಲೆಯ ಶಿರಾಡಿ ಘಾಟಿಯಲ್ಲಿ ಮಳೆಯ ಅಬ್ಬರ ತೀವ್ರಗೊಂಡಿದ್ದು, ಭಾರಿ ಮಳೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ.
ಶುಕ್ರವಾರದ ಬೆಳಿಗ್ಗೆ ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಸಂಭವಿಸಿದ ಭೂಕುಸಿತದಿಂದಾಗಿ ಶಿರಾಡಿ ಘಾಟ್ ಮೂಲಕ ಸಾಗುವ ಎಲ್ಲಾ ರೀತಿಯ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ಹಾಸನ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಮಂಗಳೂರಿನತ್ತ ತೆರಳುವ ವಾಹನ ಸವಾರರು ಬೇಲೂರು ಮಾರ್ಗವಾಗಿ ಚಾರ್ಮಾಡಿ ಘಾಟ್ ರಸ್ತೆಯನ್ನು ಬಳಸುವಂತೆ ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಬರುತ್ತಿರುವ ವಾಹನಗಳಿಗಾಗಿ ಕೊಡಗಿನ ಸಂಪಾಜೆ ಮಾರ್ಗವನ್ನು ಆಯ್ಕೆಮಾಡುವಂತೆ ಜಿಲ್ಲಾಡಳಿತ ಸಲಹೆ ನೀಡಿದೆ.
ಘಟನೆ ಸ್ಥಳದಲ್ಲಿ ಭದ್ರತಾ ಕ್ರಮ ಕೈಗೊಳ್ಳಲಾಗಿದ್ದು, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಮತ್ತು ತುರ್ತು ಸೇವಾ ತಂಡಗಳು ಭೂಕುಸಿತದ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿವೆ. ಮುಂದಿನ ದಿನಗಳಲ್ಲಿ ಮಳೆ ಮುಂದುವರಿದರೆ ಈ ಪ್ರದೇಶದಲ್ಲಿ ಮತ್ತಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.