ಬೆಂಗಳೂರು: ಲೋಕಸಭಾ ಚುನಾವಣೆ ಕ್ಲೈಮ್ಯಾಕ್ಸ್ ಘಟ್ಟದಲ್ಲಿದ್ದು ವಿವಿಧ ಸಮುದಾಯಗಳ ಮತಗಳನ್ನು ಸೆಳೆಯಲು ರಾಜಕೀಯ ಪಕ್ಶಗಳು ಹರಸಾಹಸ ನಡೆಸುತ್ತಿವೆ. ಅದರಲ್ಲೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ದಿನಕ್ಕೊಂದು ವಿದ್ಯಮಾನಕ್ಕೆ ಸಾಕ್ಷಿಯಾಗುತ್ತಿದ್ದು, ಒಕ್ಕಲಿಗ ಸಮುದಾಯದ ನಡೆ ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯ ಒಕ್ಕಲಿಗರ ಸಮುದಾಯಗಳ ಒಕ್ಕೂಟದಿಂದ ಬುಧವಾರ ಬೆಂಗಳೂರಿನಲ್ಲಿ ನಡೆಸಿದ ಸಭೆ ಅಚ್ಚರಿಯ ಸನ್ನಿವೇಹಕ್ಕೆ ಸಾಕ್ಷಿಯಾಯಿತು. ಸಭೆಯ ನಿರ್ಧಾರಗಳ ಬಗ್ಗೆ ಸಮುದಾಯದ ಮುಖಂಡರಾದ ಪ್ರೊ.ಕೃಷ್ಣೇಗೌಡ, ಯಕುವನಹಳ್ಳಿ ರಮೇಶ್, ಮೋಹನ್ ಕುಮಾರ್ ಮೊದಲಾದ ಪ್ರಮುಖರ ಉಪಸ್ಥಿತಿಯಲ್ಲಿ, ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ, ಒಕ್ಕಲಿಗ ಸಮುದಾಯದ ಸಂಘಕ್ಕೆ ಜಮೀನು ಕೊಟ್ಟಿದ್ದು, ಆದಿಚುಂಚನಗಿರಿ ವೈದ್ಯಕೀಯ, ಎಂಜಿನಿಯರಿಂಗ್ ಕಾಲೇಜು ಮಂಜೂರು ಮಾಡಿದ್ದು ಕಾಂಗ್ರೆಸ್ ಸರ್ಕಾರ. ಈಗಲೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 10 ಎಕರೆ ಜಮೀನು ಮಂಜೂರು ಮಾಡಿಸಿಕೊಟ್ಟಿದ್ದಾರೆ. ಸಮುದಾಯ ಮಠ, ಶಿಕ್ಷಣ ಸಂಸ್ಥೆಗಳಿಗೆ ಹಲವು ಕೊಡುಗೆ ನೀಡಿ ಸಮುದಾಯದ ಹಿತಕ್ಕಾಗಿ ಕಾಂಗ್ರೆಸ್ ಪಕ್ಷ ಶ್ರಮಿಸಿರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ತೀರ್ಮಾನಿಸಿದೆ ಎಂದರು.
ನಮ್ಮ ಸಮುದಾಯದ ಹಿತ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯವಿದೆ ಎಂದು ಪ್ರತಿಪಾದಿಸಿದ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ, ಸಮುದಾಯದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಕರೆ ನೀಡಿದರು.
ದೇವೆಗೌಡರಿಂದಒಕ್ಕಲಿಗ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ. ಅಪ್ಪ ಮಕ್ಕಳು ಮೋಸ ಮಾಡುತ್ತಲೇ ಇದ್ದಾರೆ. ಸಮುದಾಯಕ್ಕೆ ಮತ್ತೊಂದು ಮಠ ಸ್ಥಾಪಿಸಿದರು. ಎಚ್.ಎನ್ ನಂಜೇಗೌಡ, ಭೈರೇಗೌಡ, ಅಂಬರಿಶ್ ಸೇರಿದಂತೆ ಹಲವು ಒಕ್ಕಲಿಗೆ ನಾಯಕರನ್ನು ಜೆಡಿಎಸ್ ನಿಂದ ಹೊರಹಾಕಿದರು ಎಂದು ವಾಗ್ದಾಳಿ ನಡೆಸಿದ ಅವರು, ಹೊಸ ನಾಯಕತ್ವ ಸೃಷ್ಟಿಯಾಗಬೇಕು, ಅದರಿಂದ ಒಕ್ಕಲಿಗ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.