📝 ರಾಘವೇಂದ್ರ ಗಂಜಾಮ್
ಮಂಡ್ಯ: ಸೇವಾಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕಳೆದ 9 ದಿನಗಳಿಂದ ಮಂಡ್ಯದ ಡಿ.ಸಿ ಕಚೇರಿ ಮುಂದೆ ಜಿಲ್ಲೆಯ ನೂರಾರು ಉಪನ್ಯಾಸಕರು ಪ್ರತಿಭಟನೆ ನಡೆಸ್ತಿದ್ದಾರೆ. 9ನೇ ದಿನವಾದ ಗುರುವಾರ ಬಾಳೆ ಹಣ್ಣು ವ್ಯಾಪಾರ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ.
ರಾಜ್ಯಾಧ್ಯಂತ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಿರಂತರ ಧರಣಿ ನಡೆಸ್ತಿದ್ದಾರೆ. ಪ್ರತಿಭಟನೆಗೂ ಮುನ್ನಾ, ಜಿಲ್ಲೆಯಲ್ಲಿ ಅಕಾಲಿಕ ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಕೇವಲ 3 ರೂಪಾಯಿಗೆ ಬಾಳೆ ಹಣ್ಣು ವ್ಯಾಪಾರ ಮಾಡಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ನಾಗರಾಜು, ಕಳೆದ 9 ದಿನ ದಿಂದಲೂ ನಿರಂತರ ಧರಣಿ ನಡೆಸುತ್ತಿದ್ದರು ಸರ್ಕಾರ ಗಮನ ಹರಿಸುತ್ತಿಲ್ಲ. ನಮ್ಮ ಸಮಸ್ಯೆಗಳನ್ನು ಗಂಭೀರ ತೆಗೆದುಕೊಂಡು ಬಗೆ ಹರಿಸಬೇಕು.ಅತಿಥಿ ಉಪನ್ಯಾಸಕರ ಸೇವಾಭದ್ರತೆ ಹಾಗೂ ಬೇಡಿಕೆಗಳನ್ನು ಈಡೇರಿಸಬೇಕು. ವಿದ್ಯಾರ್ಥಿಗಳ ಭವಿಷ್ಯ ಹಾಗೂ ನಮ್ಮ ಭವಿಷ್ಯದ ಜೊತೆ ಸರ್ಕಾರ ಆಟವಾಡುತ್ತಿದೆ. ತಕ್ಷಣವೇ ಸರ್ಕಾರ ಎಚ್ಚೆತ್ತು ನಮ್ಮ ಸಮಸ್ಯೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ರು.
ಒಟ್ಟಾರೆ ಮಂಡ್ಯ ಜಿಲ್ಲೆಯ ಅತಿಥಿ ಉಪನ್ಯಾಸಕ ನಡೆಸ್ತಿರೋ ನಿರಂತರ ಧರಣಿಗೂ ಸರ್ಕಾರ ಗಮನ ಹರಿಸದೆ ಇರೋದ್ರಿಂದ ಇದೀಗ ಈ ಧರಣಿ ನಿರತ ಅತಿಥಿ ಉಪನ್ಯಾಸಕರು ಇದೀಗ ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಿದ್ದಾರೆ.