ಬೆಂಗಳೂರು: ಮಂಡ್ಯದಿಂದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಬಯಸಿದ್ದ ಸಂಸದೆ ಸುಮಲತಾ ಅಂಬರೀಷ್ ಅವರೀಗ ಬಿಜೆಪಿ ನಾಯಕರ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದಾರೆ. ಅವರ ಮುಂದಿನ ನಡೆ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳುವಂತೆ ಮಾಡಿದೆ.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ- ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ. ಆದರೆ ಈ ಮೈತ್ರಿ ಅಭ್ಯರ್ಥಿಯನ್ನು ಸುಮಲತಾ ಅಂಬರೀಷ್ ಈಗಿನ್ನೂ ಒಪ್ಪಕೊಂಡಿಲ್ಲ. ಸುಮಲತಾ ಅಂಬರೀಷ್ ಅವರ ಮನವೊಲಿಸಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಹರಸಾಹಸ ಪಡಿತ್ತಿದ್ದಾರೆ.
ಈ ನಡುವೆ, BJP-JDS ಸಮನ್ವಯ ಸಮಿತಿ ಸಭೆ ನಡೆದಿದೆ. ಈ ಸಭೆಗೆ ಸಂಸದೆ ಸುಮಲತಾ ಅಂಬರೀಷ್ ಗೈರಾಗಿರುವುದು ಅಚ್ಚರಿ ಹಾಗೂ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಟಿಕೆಟ್ ವಂಚಿತರಾಗಿರುವ ಸಂಸದೆ ಸುಮಲತಾ ಮೌನಕ್ಕೆ ಶರಣಾಗಿದ್ದು BJP-JDS ನಾಯಕರ ಸಭೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ಸಂದರ್ಭದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ನಡೆದ ಸಭೆಯಿಂದಲೂ ಸುಮಲತಾ ದೂರ ಉಳಿದಿದ್ದರು.
ಈ ನಡುವೆ, ತಮ್ಮ ಮುಂದಿನ ರಾಜಕೀಯ ನಡೆ ಕುರಿತು ನಿಋ್ಧರಿಸಲು ಸುಮಲತಾ ಅಂಬರೀಷ್ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಶನಿವಾರ (ಮಾ.30)ರಂದು ಬೆಂಬಲಿಗರ ಸಭೆ ಕರೆದಿದ್ದಾರೆ.