ಮಂಗಳೂರು: ಸಾರ್ವಜನಿಕ ಬಸ್ ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ. ಇದು ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿ ಯೋಜನೆಯಾಗಿದ್ದು, ಈ ಐದೂ ಯೋಜನೆಗಳನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲೇ ಜಾರಿ ಮಾಡಲಾಗುವುದು ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.
ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಮ್ಮ ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಮೋದಿಯವರು ಹೇಳಿದ್ದಾರೆ. ಈ ಸಂದರ್ಭದಲ್ಲಿ ಒಂದು ಸವಾಲು ಹಾಕುತ್ತಿದ್ದೇನೆ. ನಮ್ಮ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು, ನಾವು ನಮ್ಮ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ನಾವು ಈ ಯೋಜನೆಗಳನ್ನು ಜಾರಿ ಮಾಡಿದ ನಂತರ ನೀವು ದೇಶದಲ್ಲಿ ಈ ಯೋಜನೆಗಳನ್ನು ಜಾರಿ ಮಾಡಲು ಸಿದ್ಧರಿದ್ದೀರಾ? ಎಂದು ಮೋದಿಯವರನ್ನು ಪ್ರಶ್ನಿಸಿದರು.
ಕರಾವಳಿ ಭೇಟಿ ಸಂದರ್ಭದಲ್ಲಿ ಮೀನುಗಾರರ ಜತೆ ಸಂವಾದ ನಡೆಸಿದ ರಾಹುಲ್ ಗಾಂಧಿ ಅವರು ಮೀನುಗಾರರ ಹಿತರಕ್ಷಣೆಗೆ ಕೆಲವು ಭರವಸೆಗಳನ್ನು ನೀಡಿದರು.
-
ಹತ್ತು ಲಕ್ಷ ರೂ. ವಿಮೆ
-
ಸೀಮೆಯೆಣ್ಣೆ 250 ರಿಂದ 500 ಲೀಟರಿಗೆ ಏರಿಕೆ
-
ಮೀನುಗಾರ ಕುಟುಂಬದ ಮಹಿಳೆಯರಿಗೆ 1,00,000 ರೂ. ಬಡ್ಡಿ ರಹಿತ ಸಾಲ
-
ಮೀನುಗಾರರಿಗೆ ಡೀಸೆಲ್ ಹಾಗೂ ಪೆಟ್ರೋಲ್ ಮೇಲೆ 25 ರೂ. ಸಬ್ಸಿಡಿ
ಕಳೆದ ಕೆಲವು ವರ್ಷಗಳಿಂದ ಇಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಈ ಸರ್ಕಾರವನ್ನು ನೀವು ಆರಿಸಲಿಲ್ಲ. ಈ ಸರ್ಕಾರ ನಿಮ್ಮ ಮತದಿಂದ ರಚನೆಯಾಗಿಲ್ಲ. ಈ ಸರ್ಕಾರವನ್ನು ಬಿಜೆಪಿ ಕಳ್ಳತನದ ಮೂಲಕ ರಚಿಸಿದ್ದಾರೆ. ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದು, ಭ್ರಷ್ಟಾಚಾರದ ಹಣದಲ್ಲಿ ಶಾಸಕರನ್ನು ಖರೀದಿ ಮಾಡಿದ್ದಾರೆ, ನಿಮ್ಮ ಸರ್ಕಾರವನ್ನು ನಿಮ್ಮಿಂದಲೇ ಕಳ್ಳತನ ಮಾಡಿದ್ದಾರೆ. ಕಳ್ಳತನ ಇವರಿಗೆ ಅಭ್ಯಾಸವಾಗಿದೆ. ಸರ್ಕಾರವಾಗಲಿ, ಶಾಸಕರಾಗಲಿ, ಗುತ್ತಿಗೆ, ಸಕ್ಕರೆ ಕಾರ್ಖಾನೆ ಎಲ್ಲವನ್ನು ಇವರು ಕದಿಯುತ್ತಾರೆ. ಬಿಜೆಪಿ ನಾಯಕರು ಹೇಳುತ್ತಾರೆ. ಈ ಚುನಾವಣೆ ಕರ್ನಾಟಕವನ್ನು ಮೋದಿ ಕೈಗೆ ಕೊಡುವ ಚುನಾವಣೆ ನೀಡುವುದಾಗಿದೆ ಎಂದು. ಈಗಲೂ ರಾಜ್ಯ ಬಿಜೆಪಿ ಕೈಯಲ್ಲಿದೆ. ಇದು ಭವಿಷ್ಯವನ್ನು ಮೋದಿ ಅವರ ಕೈಗೆ ಕೊಡಿ ಎನ್ನುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಇರುವ ಭ್ರಷ್ಟಾಚಾರದ ಸರ್ಕಾರ ಬೇಕಾ? ಇವರು ಯಾವುದೇ ವಿಚಾರದಲ್ಲೂ 40% ಕಮಿಷನ್ ತೆಗೆದುಕೊಳ್ಳುತ್ತಾರೆ. ಬಿಜೆಪಿಯಲ್ಲಿ 2500 ಕೋಟಿಗೆ ಮುಖ್ಯಮಂತ್ರಿ ಹುದ್ದೆ ಸಿಗುತ್ತದೆ ಎಂದು ಬಿಜೆಪಿ ಶಾಸಕರೇ ಹೇಳಿದ್ದಾರೆ ಎಂದು ರಾಹುಲ್ ಗಾಂಧಿ ಗಮನಸೆಳೆದರು .
ಗುತ್ತಿಗೆದಾರರ ಸಂಘ, ರುಪ್ಸಾ ಸಂಸ್ಥೆ ರಾಜ್ಯದಲ್ಲಿ ಎಲ್ಲಾ ಕೆಲಸಗಳಿಗೆ 40% ಕಮಿಷನ್ ಪಡೆಯಲಾಗುತ್ತಿದೆ ಎಂದು ಪ್ರಧಾನಿಗೆ ಪತ್ರ ಬರೆದಿದ್ದು, ಆ ಪತ್ರಕ್ಕೆ ಉತ್ತರ ನೀಡುವುದಿರಲಿ, ಆ ಪತ್ರವನ್ನು ಪ್ರಧಾನಿ ಮೋದಿ ಅವರು ಸ್ವೀಕರಿಸಿಲ್ಲ. ದಿಂಗಾಲೇಶ್ವರ ಸ್ವಾಮೀಜಿಗಳು ಬಿಜೆಪಿ ಸರ್ಕಾರ ಮಠಗಳಿಗೆ ವಿನಾಯಿತಿ ನೀಡಿ 30% ಕಮಿಷನ್ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ಇದು ಬಿಜೆಪಿಯ ಭ್ರಷ್ಟಾಚಾರ ಧರ್ಮ. ಬಿಜೆಪಿ ಶಾಸಕನ ಪುತ್ರ ಲಂಚ ಪಡೆಯುವಾಗ 8 ಕೋಟಿ ಹಣದೊಂದಿಗೆ ಸಿಕ್ಕಿ ಬೀಳುತ್ತಾನೆ. ಈ ಸರ್ಕಾರ ಪಿಎಸ್ಐ, ಸಹಾಯಕ ಪ್ರಾಧ್ಯಾಪಕರು, ಕಿರಿಯ ಇಂಜಿನಿಯರ್ ಸೇರಿದಂತೆ ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಈ ಸರ್ಕಾರದಲ್ಲಿ ಹಗರಣಗಳ ಸರಮಾಲೆ ಇದೆ. ಒಂದೆಡೆ ಭ್ರಷ್ಟಾಚಾರ, ಮತ್ತೊಂದೆಡೆ ಬೆಲೆ ಏಱಿಕೆ, ನಿರುದ್ಯೋಗ ಸಮಸ್ಯೆ. ಈ ಹಿಂದೆ ಪೆಟ್ರೋಲ್ 60 ರೂ ಇತ್ತು ಈಗ 100 ರೂ ಆಗಿದೆ. ಅಡುಗೆ ಅನಿಲ ಸಿಲಿಂಡರ್ 400 ರೂ. ಇತ್ತು ಇಂದು 1100 ರೂ. ಆಗಿತ್ತು. ಜಿಎಸ್ ಟಿ ಮೂಲಕ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳನ್ನು ನಾಶ ಮಾಡಿದೆ. ನೋಟು ರದ್ಧತಿ ಮೂಲಕ ಬಡವರ ಹಣ ಕಿತ್ತು ಶ್ರೀಮಂತ ಉದ್ಯಮಿಗಳ ಕೈಯಲ್ಲಿ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ಅವರು ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.
ಇಂದು ಯಾವ ಪರಿಸ್ಥಿತಿ ಇದೆ ಎಂದರೆ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಏನೇ ಆದರೂ ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸಲು ಸಾಧ್ಯವಿಲ್ಲ. 40 ಕೋಟಿ ಜನ ಮತ್ತೆ ಬಡತನ ರೇಖೆಗಿಂತ ಕೆಳಗೆ ಹೋಗಿದ್ದಾರೆ. ದೇಶದ ಶೇ.1ರಷ್ಟು ಜನರ ಬಳಿ ದೇಶದ ಶೇ.40 ಸಂಪತ್ತು ಇದೆ. 90 ಲಕ್ಷ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಮುಚ್ಚಿವೆ ಇದು ಬಿಜೆಪಿಯ ವಿಕಾಸ. ಭ್ರಷ್ಟಾಚಾರ 40%, ನಿರುದ್ಯೋಗ, ಬೆಲೆ ಏರಿಕೆ ಬಿಜೆಪಿ ಸಾಧನೆ ಎಂದು ಟೀಕಿಸಿದ ಅವರು, ಚುನಾವಣೆ ಮುನ್ನ ಕಾಂಗ್ರೆಸ್ ನಾಯಕರೆಲ್ಲ ಭೇಟಿ ಮಾಡಿ ಕಾಂಗ್ರೆಸ್ ಕರ್ನಾಟಕ ರಾಜ್ಯದ ಜನತೆಗೆ ಏನು ನೀಡಬಹುದು ಎಂದು ಕೇಳಿದೆ. ನಾವು ಮಹಿಳೆಯರು, ಯುವಕರು, ಕಾರ್ಮಿಕರು, ರೈತರಿಂದ ಸಲಹೆ ಪಡೆದೆವು. ನಂತರ ನೀವು ನಾಲ್ಕು ಉತ್ತರ ನೀಡಿದಿರಿ. ಮೊದಲು ರಾಜ್ಯದ ಮಹಿಳೆಯರು ಕೊಟ್ಟ ಉತ್ತರಿಂದ ಗೃಹಲಕ್ಷ್ಮಿ ಯೋಜನೆ ರೂಪುಗೊಂಡಿತು. ಈ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ ನೀಡುವುದು. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತ. ಅನ್ನಭಾಗ್ಯ ಯೋಜನೆ ಮೂಲಕ ಪ್ರತಿ ಬಡ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ ಅಖ್ಕಿ ಉಚಿತ. ಯುವನಿಧಿ ಯೋಜನೆ ಮೂಲಕ ಪದವೀಧರ ನಿರುದ್ಯೋಗಿಗೆ 3 ಸಾವಿರ, ಡಿಪ್ಲೋಮಾ ಪದವೀಧರ ನಿರುದ್ಯೋಗಿಗೆ 1500 ನಿರುದ್ಯೋಗ ಭತ್ಯೆ ನೀಡಲಾಗುವುದು. ರಾಜ್ಯದಲ್ಲಿ ಹಣಕ್ಕೆ ಕೊರತೆ ಇಲ್ಲ. ಈ ಕೆಲಸಗಳನ್ನು ನಿಷ್ಠಾವಂತ ಸರ್ಕಾರ ಜಾರಿ ಮಾಡಬಹುದು. ಈ ಯೋಜನೆ ಸರ್ಕಾರದ ಮೊದಲ ಸಚಿವ ಸಂಪುಟದಲ್ಲಿ ಜಾರಿ ಮಾಡಲಾಗುವುದು ಎಂದು ಭರವಸೆ ನೀಡಿದರು.