ಬೆಂಗಳೂರು: ಧಾರ್ಮಿಕ ಕ್ಷೇತ್ರ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಉಪಸ್ಥಿತಿಯಲ್ಲಿ ಅರ್ಚಕರು ಹುಟ್ಟುಹಬ್ಬ ಆಚರಿಸಿಕೊಂಡ ಬಗ್ಗೆ ಜಾಲತಾಣಗಳಲ್ಲಿ ಛಾಯಾಚಿತ್ರ ಹರಿದಾಡುತ್ತಿದ್ದು, ಈ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ಕ್ರಮ ಜರುಗಿಸುವಂತೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಆದೇಶಿಸಿದ್ದಾರೆ.
ಇದೇ ವೇಳೆ, ಹುಟ್ಟುಹಬ್ಬ ಆಚರಣೆ ವೇಳೆ ದೇವಾಲಯದಲ್ಲಿ ಯಾವುದೇ ಅನ್ಯ ಧರ್ಮೀಯರು ಭಾಗವಹಿಸಿಲ್ಲ, ಈ ವಿಚಾರದಲ್ಲಿ ನಡೆದಿರುವ ಅಪಪ್ರಚಾರ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಸರ್ಕಾರ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಹಲಸೂರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಾನಕಿ ರಾಮ್ ರೆಡ್ಡಿ, ಪ್ರಧಾನ ಅರ್ಚಕರಾದ ಸುಂದರ್ ದಿಕ್ಷೀತ್ ಮತ್ತು ಸಹಾಯಕ ಆರ್ಚಕ ಎಸ್.ಸುರೇಶ್ ದೀಕ್ಷಿತ್ ಕರ್ತವ್ಯ ನಿರ್ವಹಿಸುತ್ತಿದ್ದು, ಸೆಪ್ಟೆಂಬರ್ 23ರಂದು ದೇವಾಲಯದ ಆವರಣದೊಳಗೆ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಹಾಯಕ ಅರ್ಚಕರ ಹುಟ್ಟುಹಬ್ಬ ಆಚರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ದೇವಾಲಯದ ಆವರಣದೊಳಗೆ ಯಾವುದೇ ವ್ಯಕ್ತಿಯ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಮಾಡಲು ಅವಕಾಶವಿಲ್ಲ. ಆದರೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಛಾಯಾಚಿತ್ರಗಳು ವಾಟ್ಸಪ್ಗಳಲ್ಲಿ ಹರಿದಾಡಿದೆ. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಅರ್ಚಕರಾದವರು ದೇವಸ್ಥಾನದಲ್ಲಿ ಈ ರೀತಿಯಲ್ಲಿ ವರ್ತಿಸಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸೂಕ್ತ ವಿಚಾರಣೆ ಮಾಡಿ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಜರುಗಿಸಲು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಆದೇಶಿಸಿದ್ದಾರೆ.
ಕೆಲವೊಂದು ಜಾಲತಾಣಗಳಲ್ಲಿ ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಹಿಂದೂ ಧರ್ಮದವರನ್ನು ಹೊರತುಪಡಿಸಿ, ಅನ್ಯ ಧರ್ಮದವರು ಭಾಗವಹಿಸಿದ್ದರು ಎಂಬ ವಿಷಯವು ಸತ್ಯಕ್ಕೆ ದೂರವಾಗಿದೆ. ಈ ಬಗ್ಗೆ ಪ್ರಾಥಮಿಕ ವಿಚಾರಣೆ ನಡೆಸಲಾಗಿದ್ದು, ಇದು ಸಂಪೂರ್ಣ ಸುಳ್ಳು ಹಾಗೂ ದುರುದ್ದೇಶದಿಂದ ಕೂಡಿರುವುದು ಎಂದು ಕಂಡು ಬಂದಿದೆ ಎಂದು ಸಚಿವರ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.