ಹುಬ್ಬಳ್ಳಿ: ಧಾರವಾಡದಲ್ಲಿರುವ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಆವರಣದಲ್ಲಿ ಪುಣೆಯ ಖಡಕ್ವಾಸ್ಲಾದ ಎನ್.ಡಿ.ಎ.ಮಾದರಿಯ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು. ತಂತ್ರಜ್ಞಾನ, ವಿಜ್ಞಾನ ಆಧರಿಸಿ ಸೈಬರ್ ಅಪರಾಧಗಳ ತ್ವರಿತ ಪತ್ತೆ ಮಾಡುವ ಕೌಶಲ್ಯವನ್ನು ಪೊಲೀಸರು ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸುಧಾರಣೆಗಳನ್ನು ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಸಬಾಪೇಟ ಹಾಗೂ ದಕ್ಷಿಣ ಸಂಚಾರ ಪೊಲೀಸ್ ಠಾಣೆಗಳ ಉದ್ಘಾಟನೆ ಮತ್ತು ಗೋಕುಲ ರಸ್ತೆ,ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಮಧ್ಯಮ ಕ್ರಮಾಂಕದ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡಲು ಪುಣೆಯ ಖಡಕ್ವಾಸ್ಲಾದಲ್ಲಿರುವ ಎನ್.ಡಿ.ಎ. ಮಾದರಿಯ ತರಬೇತಿ ಕೇಂದ್ರವನ್ನು ಧಾರವಾಡದಲ್ಲಿ ಸ್ಥಾಪಿಸಲಾಗುವುದು. ಹುಬ್ಬಳ್ಳಿಯಲ್ಲಿ ಟ್ರಾಫಿಕ್ ಕಂಟ್ರೋಲ್ ಕಮಾಂಡ್ ಸೆಂಟರ್ ಸ್ಥಾಪನೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಹಣ ಒದಗಿಸಬಹುದು.ಸೂಕ್ತ ಪ್ರಸ್ತಾವನೆ ಬಂದರೆ ರಾಜ್ಯ ಸರ್ಕಾರದಿಂದ ಹಣ ಒದಗಿಸಲಿದೆ . ತಂತ್ರಜ್ಞಾನದ ದುರುಪಯೋಗ ತಡೆಯಬೇಕು.ಡಿಜಿಟಲ್ ಹಾಗೂ ಸೈಬರ್ ಅಪರಾಧಗಳ ಪತ್ತೆ ಕಾರ್ಯದಲ್ಲಿ ಇನ್ನೂ ಸುಧಾರಣೆ ತರಲಾಗುವುದು. ಪೊಲೀಸ್ ಠಾಣೆಗಳು ಸಮಾಜದ ಭದ್ರತೆಗೆ ಅತ್ಯಗತ್ಯ. ದಕ್ಷವಾದ ಸೇನೆ ಹಾಗೂ ಪೊಲೀಸರು ಇರುವಲ್ಲಿ ಶಾಂತಿ ನೆಲೆಸಿರುತ್ತದೆ. ಶಾಂತಿ ಇದ್ದಲ್ಲಿ ಅಭಿವೃದ್ಧಿಯಾಗುತ್ತದೆ. ಕರ್ನಾಟಕ ಪೊಲೀಸರು ದಕ್ಷತೆಗೆ ಹೆಸರಾಗಿದ್ದಾರೆ. ಹುಬ್ಬಳ್ಳಿಯ ಜನದಟ್ಟಣೆ ಹಾಗೂ ವಾಹನ ದಟ್ಟಣೆ ನಿಯಂತ್ರಣಕ್ಕೆ ಸಂಚಾರ ಪೊಲೀಸ್ ಠಾಣೆಗಳ ಅಗತ್ಯತೆ ಮನಗಂಡು ಅಲ್ಲಿ ಠಾಣೆ ಸ್ಥಾಪಿಸಲಾಗಿದೆ. ಅಭಿವೃದ್ಧಿಯ ವಿಷಯದಲ್ಲಿ ಅಧಿಕಾರಿಗಳು ಸಕಾರಾತ್ಮಕವಾಗಿ ಕ್ರಿಯಾಶೀಲವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.
ಕಾನೂನು ಚೌಕಟ್ಟಿನಲ್ಲಿ ಜನರಿಗೆ ನೆರವು ನೀಡಲು ಅಧಿಕಾರಿಗಳು ಹಿಂದೇಟು ಹಾಕಬಾರದು. 2025 ರೊಳಗೆ 11 ಸಾವಿರ ಪೊಲೀಸ್ ವಸತಿ ಗೃಹಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ 2 ಸಾವಿರ ವಸತಿ ಗೃಹಗಳು ತಲೆ ಎತ್ತಲಿವೆ.ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದ ನಂತರ ಒಂದೇ ವರ್ಷದ ಅವಧಿಯಲ್ಲಿ 117 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗಿದೆ. 8101 ಶಾಲೆಗಳ ಕಟ್ಟಡಗಳನ್ನು ಮುಂದಿನ ಐದು ವರ್ಷಗಳ ಅವಧಿಯಲ್ಲಿ ನಿರ್ಮಿಸುವ ಗುರಿ ಹೊಂದಲಾಗಿದೆ. ತಲಾ 7 ಕೋಟಿ ರೂ.ವೆಚ್ಚದಲ್ಲಿ ರಾಜ್ಯದಲ್ಲಿ 81 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲು ಕ್ರಮವಹಿಸಲಾಗಿದೆ ಎಂದವರು ಪ್ರಕಟಿಸಿದರು. ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿ ಹುಬ್ಬಳ್ಳಿ ಧಾರವಾಡ ಅವಳಿ ನಗರಗಳೂ ಸೇರಿ ಎರಡನೇ ಹಂತದ ಒಟ್ಟು ಆರು ನಗರಗಳಿಗೆ ಹೊಂದಿಕೊಂಡು ವಿಸ್ತೃತ ಹೊಸ ನಗರಗಳನ್ನು ನಿರ್ಮಿಸಲಾಗುವುದು.ಹುಬ್ಬಳ್ಳಿಯಲ್ಲಿ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಸ್ಥಾಪನೆಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಷಿ ಮಾತನಾಡಿ, ವರ್ಷದಲ್ಲಿ 117 ಪೊಲೀಸ್ ಠಾಣೆಗಳನ್ನು ನಿರ್ಮಿಸಿರುವುದು ದಾಖಲೆಯ ಕಾರ್ಯವಾಗಿದೆ. ಈ ಬಾರಿ ಬಜೆಟ್ನಲ್ಲಿ ಮುಖ್ಯಮಂತ್ರಿಯವರು ಪೊಲೀಸ್ ವಸತಿ ಗೃಹ ಹಾಗೂ ಠಾಣೆಗಳಿಗೆ ಸುಮಾರು ಒಂದು ಸಾವಿರ ಕೋಟಿ ರೂ.ನೀಡಿರುವುದು. ಪೊಲೀಸ್ ವಿದ್ಯಾನಿಧಿ ಮೂಲಕ ಪೊಲೀಸರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸುತ್ತಿರುವುದು ಸ್ವಾಗತಾರ್ಹವಾಗಿದೆ ಎಂದರು.
ತಂತ್ರಜ್ಞಾನ ಮತ್ತು ವಿಜ್ಞಾನ ಪೊಲೀಸ್ ಇಲಾಖೆಯಲ್ಲಿ ಹೆಚ್ಚು ಅಳವಡಿಕೆಯಾಗಬೇಕು ವಿಧಿವಿಜ್ಞಾನ ಪ್ರಯೋಗಾಲಯಗಳಲ್ಲಿ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಿ,ಎಲ್ಲೆಡೆ ಸುಲಭವಾಗಿ ಹಂಚಿಕೆ ಮಾಡಿಕೊಳ್ಳಬಹುದಾದಂತಹ ವ್ಯವಸ್ಥೆ ಜಾರಿಗೊಳ್ಳಬೇಕು. ಆಧುನಿಕತೆ ಮತ್ತು ಪೊಲೀಸರ ಮಾನವೀಯತೆ ಜೊತೆ ಜೊತೆಯಾಗಿ ಸಾಗಬೇಕು ಎಂದರು.
ಗೃಹಸಚಿವ ಅರಗ ಜ್ಞಾನೇಂದ್ರ ಮಾತನಾಡಿ, ಎಂಟು ತಿಂಗಳ ಹಿಂದೆಯಷ್ಟೇ ಶಂಕುಸ್ಥಾಪನೆ ನೆರವೇರಿಸಿದ್ದ ಎರಡು ಪೊಲೀಸ್ ಠಾಣೆಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಉದ್ಘಾಟಿಸಿರುವುದು ಅನುಕರಣೀಯ ಸಂಗತಿಯಾಗಿದೆ ಎಂದರು. ಈ ಹಿಂದೆ ವರ್ಷಕ್ಕೆ ರಾಜ್ಯದಲ್ಲಿ 2 ರಿಂದ 3 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿತ್ತು.ಈಗ ವಾರ್ಷಿಕ 100 ಕ್ಕೂ ಹೆಚ್ಚು ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. ಶೇ.35 ರಷ್ಟಿದ್ದ ಖಾಲಿ ಹುದ್ದೆಗಳ ಪ್ರಮಾಣವನ್ನು ಶೇ.12 ಕ್ಕೆ ಇಳಿಕೆ ಮಾಡಲಾಗಿದೆ. ಶೀಘ್ರದಲ್ಲಿಯೇ 900 ಪಿಎಸ್ಐಗಳ ನೇಮಕಾತಿ ನಡೆಯಲಿದೆ. ನೇಮಕಾತಿಯಲ್ಲಿ ಶೇ.20 ರಷ್ಟು ಮಹಿಳೆಯರಿಗೆ ಆದ್ಯತೆ ನೀಡಲಾಗುವುದು ಎಂದವರು ತಿಳಿಸಿದರು.
ಪೊಲೀಸ್ ಇಲಾಖೆಗೆ ಈ ವರ್ಷ ಅತ್ಯಂತ ಸವಾಲಿನದಾಗಿತ್ತು.ಹುಬ್ಬಳ್ಳಿ ಗಲಭೆಯನ್ನು ಇಲ್ಲಿನ ಪೊಲೀಸ್ ಆಯುಕ್ತ ಲಾಭೂರಾಮ್ ನೇತೃತ್ವದ ತಂಡ ಅತ್ಯಂತ ಸಮರ್ಥವಾಗಿ ಹಾಗೂ ಕ್ಷಿಪ್ರವಾಗಿ ತಹಬಂದಿಗೆ ತರುವ ಮೂಲಕ ಇಲ್ಲಿನ ಪೊಲೀಸರು ಉತ್ತಮ ಕಾರ್ಯ ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ನೂತನ ಪೊಲೀಸ್ ಠಾಣೆಗಳ ಉದ್ಘಾಟನೆ
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮವು 2.12 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಕಸಬಾ ಪೇಟ ಪೊಲೀಸ್ ಠಾಣೆ,1.94 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ದಕ್ಷಿಣ ಸಂಚಾರ ಪೊಲೀಸ್ ಠಾಣೆಗಳನ್ನು ಮುಖ್ಯಮಂತ್ರಿಯವರು ಉದ್ಘಾಟಿಸಿದರು. ಕಂಪ್ಯೂಟರ್ ,ಆಯುಧ,ವರದಿ,ವಿಚಾರಣಾ ಕೊಠಡಿಗಳು,ಪುರುಷ ಮತ್ತು ಮಹಿಳಾ ಲಾಕ್ ಅಪ್,ಪ್ಯಾಂಟ್ರಿ,ದಾಖಲೆಗಳ ಕೊಠಡಿ ,ಸಭಾಂಗಣ ,ಶೌಚಾಲಯ ಮತ್ತಿತರ ಸೌಕರ್ಯಗಳನ್ನು ಹೊಂದಿವೆ.
7.49 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವ ಗೋಕುಲ ರಸ್ತೆ,ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ಶಂಕುಸ್ಥಾಪನೆ ನೆರವೇರಿಸಲಾಯಿತು.