ನವದೆಹಲಿ: ಜೂನ್ 21ರಂದು ನಡೆಯಲಿರುವ NEET UG 2026 ಮರುಪರೀಕ್ಷೆಯನ್ನು ಸುಗಮ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಸಹಕಾರ ನೀಡುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ಗಳು ಹಾಗೂ ಆಡಳಿತಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ದೇಶದ ಹಲವು ಭಾಗಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿ ಇರುವ ಹಿನ್ನೆಲೆ, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅನುಕೂಲಕ್ಕೆ ಅಗತ್ಯ ಸೌಲಭ್ಯಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಕಲ್ಪಿಸುವಂತೆ ಸಚಿವರು ಸೂಚಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಸುರಕ್ಷಿತ ಕುಡಿಯುವ ನೀರು, ಸಮರ್ಪಕ ಆಸನ ವ್ಯವಸ್ಥೆ, ಕಾರ್ಯನಿರ್ವಹಿಸುವ ಫ್ಯಾನ್ ಅಥವಾ ಕೂಲರ್ಗಳು, ಸ್ವಚ್ಛ ಶೌಚಾಲಯಗಳು, ನೆರಳಿನ ಕಾಯುವ ಸ್ಥಳ, ನಿರಂತರ ವಿದ್ಯುತ್ ಸರಬರಾಜು ಹಾಗೂ ಅಗತ್ಯವಿರುವ ಕಡೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಡಳಿತ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.
ವಿದ್ಯಾರ್ಥಿಗಳ ಹಿತಾಸಕ್ತಿಯೇ ಮುಖ್ಯವಾಗಿದ್ದು, ಪರೀಕ್ಷಾ ದಿನ ಅಭ್ಯರ್ಥಿಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆಯೂ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಲಾಗಿದೆ.
NEET ಮರುಪರೀಕ್ಷೆಯನ್ನು ಪಾರದರ್ಶಕ, ಸುಗಮ ಮತ್ತು ನ್ಯಾಯಯುತವಾಗಿ ನಡೆಸಲು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸಂಪೂರ್ಣ ಸಹಕಾರ ನೀಡಲಿವೆ ಎಂಬ ವಿಶ್ವಾಸವನ್ನು ಧರ್ಮೇಂದ್ರ ಪ್ರಧಾನ್ ವ್ಯಕ್ತಪಡಿಸಿದ್ದಾರೆ.

























































