ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ನೇತ್ರತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಜೆಡಿಎಸ್ ಬೆಂಬಲ ಘೋಷಿಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಯುತ್ತಿರುವ ಸ್ಥಳಕ್ಕೆ ಜೆಡಿಎಸ್ ನಾಯಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ ಬೆಳವಣಿಗೆ ಮೀಸಲಾತಿ ಸಮರಕ್ಕೆ ರೋಚಕತೆಯ ತಿರುವು ತಂದುಕೊಟ್ಟಿತು.
ಇದೀಗ ಈ ಸತ್ಯಾಗ್ರಹ 35ನೇ ದಿನವೂ ಮುಂದುವರಿದಿದ್ದು ಗುರುವಾರದ ಕುಮಾರಸ್ವಾಮಿ ಭೇಟಿ ಪಂಚಮಸಾಲಿ ಹೋರಾಟಕ್ಕೆ ರಣೋತ್ಸಾಹ ತುಂಬಿದಂತಾಯಿತು. ನುಡಿದಂತೆ ನಡೆಯದವರಿಗೆ ಮುಂಬರುವ ಚುನಾವಣೆ ಬ್ಯಾಲೆಟ್ ಪೇಪರ್ನಲ್ಲಿ ಉತ್ತರ ಕೊಡುತ್ತೇವೆ ಎಂದು ಪಂಚಮಸಾಲಿ ಲಿಂಗಾಯತ ಸಮುದಾಯದವರು ಘರ್ಜಿಸುತ್ತಿರುವಾಗಲೇ ಹೆಚ್ಡಿಕೆ ಅವರ ನಡೆ ರಾಜಕಾರಣದಲ್ಲೂ ಚರ್ಚೆಗೆ ಕಾರಣವಾಗಿದೆ.
ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಮೃತ್ಯುಂಜಯ ಮಹಾಸ್ವಾಮಿಗಳ ಜೊತೆ ಮಾತುಕತೆ ನಡೆಸಿದ ಎಚ್ ಡಿ ಕುಮಾರಸ್ವಾಮಿ ಮೀಸಲಾತಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಹರಿಹರದ ಮಾಜಿ ಶಾಸಕ ಎಚ್ ಎಸ್ ಶಿವಶಂಕರ್ ಹಾಗೂ ಸಾವಿರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.
👉 ಇದನ್ನೂ ಓದಿ.. ಪಂಚಮಸಾಲಿ ಹೋರಾಟದಲ್ಲಿ ವಿವಿಧ ಸಮುದಾಯಗಳ ಶ್ರೀಗಳು ಭಾಗಿ.. ಜಗದ್ಗುರುಗಳ ಹೋರಾಟಕ್ಕೆ ಮತ್ತಷ್ಟು ಬಲ..
ಇದೆಲ್ಲದರ ನಡುವೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ಶಾಸಕರಾದ ವಿನಯ ಕುಲಕರ್ಣಿ, ಲಕ್ಷ್ಮೀ ಹೆಬ್ಬಾಳ್ಕರ್, ಎಂ.ಬಿ.ಪಾಟೀಲ್ ಸಹಿತ ವಿವಿಧ ಪಕ್ಷಗಳ ನಾಯಕರು ಪಕ್ಷ ಭೇದ ಮರೆತು ಈ ಸತ್ಯಾಗ್ರಹದಲ್ಲಿ ಭಾಗಿಯಾಗುತ್ತಿದ್ದಾರೆ. ನಮ್ಮ ಸಮಾಜಕ್ಕಾಗಿ, ನಮ್ಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಕೈಗೊಂಡಿರುವ ಸತ್ಯಾಗ್ರಹದಲ್ಲಿ ಭಾಗವಹಿ ನಮ್ಮ ಕರ್ತವ್ಯವನ್ನು ಸಮರ್ಪಿಸೋಣ ಎಂಬ ಸಂದೇಶವನ್ನು ಈ ನಾಯಕರು ರವಾನಿಸಿದ್ದಾರೆ.
ಪಂಚಮಸಾಲಿ ಕೂಡಲಸಂಗಮ ಪೀಠದ ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿ ನಡೆಸುತ್ತಿರುವ ಧರಣಿ ಸ್ಥಳಕ್ಕೆ ಬುಧವಾರ ಆರ್ಯ ಈಡಿಗ ಸಮಾಜದ ಗುರುಗಳಾದ ಶ್ರೀ ಪ್ರಣಮಾನಂದ ಮಹಾಸ್ವಾಮಿ ಭೇಟಿ ನೀಡಿದರು. ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಅವರೂ ಭಾಗಿಯಾಗಿ ರಣೋತ್ಸಾಹ ತುಂಬಿದರು.