ದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ. ಕೊರೋನಾ ಸೋಂಕಿನಿಂದ ಪಾರಾದರೂ ಅನಂತರದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುಗ್ರಾಮದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಹ್ಮದ್ ಪಟೇಲ್ ಅವರು ಬರಬರುತ್ತಾ ಅಂಗಾಂಗ ವೈಫಲ್ಯಕ್ಕೊಳಗಾಗಿದ್ದರೆನ್ನಲಾಗಿದೆ. ಇಂದು ನಸುಕಿನ ಜಾವ 3.30ರ ಸುಮಾರಿಗೆ ಕೊನೆಯುಸಿರೆಳೆದರೆಂದು ಅವರ ಆಪ್ತರು ತಿಳಿಸಿದ್ದಾರೆ.
ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿಯೂ ಆಗಿದ್ದ ಅಹ್ಮದ್ ಪಟೇಲ್ ರಾಜ್ಯಸಭಾ ಸದಸ್ಯರಾಗಿದ್ದರು. ಕಾಂಗ್ರೆಸ್ ಹಿರಿಯ ನಾಯಕನ ನಿಧನಕ್ಕೆ ಮುಖಂಡರನೇಕರು ಸಂತಾಪ ಸೂಚಿಸಿದ್ದಾರೆ.







































































