ಬೆಂಗಳೂರು: ಶುಕ್ರವಾರ ವಿಧಿವಶರಾದ ನಟ ಪುನೀತ್ ರಾಜ್ಕುಮಾರ್ ಅವರ ಅಂತ್ಯಸಂಸ್ಕಾರ ಇಂದು ಬೆಳಿಗ್ಗೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಉಪಸ್ಥಿತರಿದ್ದು ಸರ್ಕಾರದ ಪರವಾಗಿ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ ನಾಯಕರನೇಕರು ಉಪಸ್ಥಿತರಿದ್ದು ಅಂತಿಮ ನಮನ ಸಲ್ಲಿಸಿದರು.
ಪುನೀತ್ ಸಹೋದರ ರಾಘವೇಂದ್ರ ರಾಜ್ಕುಮಾರ್ ಮಗ ವಿನಯ್ ಅಂತ್ಯ ಸಂಸ್ಕಾರರದ ವಿಧಿವಿಧಾನ ನೆರವೇರಿಸಿದರು.
ಸಹೋದರ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸಹಿತ ಡಾ.ರಾಜ್ ಕುಟುಂಬಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸುದೀಪ್, ಯಶ್, ಸಾಧುಕೋಕಿಲಾ, ವಿಜಯ ರಾಘವೇಂದ್ರ, ರಾಕ್ಲೈನ್ ವೆಂಕಟೇಶ್ ಸಹಿತ ಕನ್ನಡ ಚಿತ್ರರಂಗದ ನಟ-ನಟಿಯರು ದೊಡ್ಮನೆ ಹುಡುಗನಿಗೆ ಅಂತಿಮ ನಮನ ಸಲ್ಲಿಸಿದರು.