ಬೆಂಗಳೂರು: ಕನ್ನಡ ಸಾರಸ್ವತ ಲೋಕದ ದಿಗ್ಗಜ, ನಾಡೋಜ ಪುರಸ್ಕೃತ ಪ್ರೊ.ಜಿ ವೆಂಕಟಸುಬ್ಬಯ್ಯ ವಿಧಿವಶರಾಗಿದ್ದಾರೆ. ಕನ್ನಡದ ನಿಘಂಟು ತಜ್ಞರೆಂದೇ ಖ್ಯಾತರಾಗಿರುವ ಶತಾಯುಷಿ ಪ್ರೊ.ಜಿ ವೆಂಕಟಸುಬ್ಬಯ್ಯರಿಗೆ 108 ವರ್ಷ ವಯಸ್ಸಾಗಿತ್ತು.
ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ವೆಂಕಟಸುಬ್ಬಯ್ಯ ಅವರು, ಭಾನುವಾರ ತಡರಾತ್ರಿ 1.15ಕ್ಕೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.ಬೆಂಗಳೂರಿನ ಜಯನಗರ 7ನೇ ಬ್ಲಾಕ್ನಲ್ಲಿರಿವ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಗಣ್ಯರನೇಕರು ಶ್ರದ್ಧಾಂಜಲಿ ಸಲ್ಲಿಸಿದರು.
1913ರ ಆಗಸ್ಟ್ 13ರಂದು ಶ್ರೀರಂಗಪಟ್ಟಣದ ಗಂಜಾಂನಲ್ಲಿ ಜನಿಸಿದ್ದ ಪ್ರೊ.ಜಿ.ವೆಂಕಟಸುಬ್ಬಯ್ಯ, ಕನ್ನಡ ಸಾಹಿತ್ಯಲೋಕದಲ್ಲಿ ಉತ್ತಮ ಬರಹಗಾರರಾಗಿದ್ದರು. ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಅವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ‘ಕನ್ನಡ ನಿಘಂಟು ಶಾಸ್ತ್ರ ಪರಿಚಯ’ ಇವರ ಶ್ರೇಷ್ಠ ಗ್ರಂಥವಾಗಿದ್ದು ನಿಘಂಟು ತಜ್ಞ ಎಂದೇ ಖ್ಯಾತರಾಗಿದ್ದಾರೆ.