ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭಾ ಭೈಠಕ್ ಈ ತಿಂಗಳ 21 ರಿಂದ 23ರ ವರೆಗೆ ನಡೆಯಲಿದೆ. ಬೆಂಗಳೂರು ಹೊರವಲಯದ ಚನ್ನೇನಹಳ್ಳಿಯಲ್ಲಿ ಈ ಸಭೆ ನಡೆಯಲಿದ್ದು, ಸಂಘದ ಮುಂದಿನ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಯಲಿದೆ ಹಾಗೂ ಪ್ರಮುಖ ನಿರ್ಧಾರಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು RSS ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್ ತಿಳಿಸಿದ್ದಾರೆ.
ABPS ನಡೆಯುವ ಚನ್ನೇನಹಳ್ಳಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ಒದಗಿಸಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅತ್ಯುನ್ನತ ನೀತಿ ನಿರ್ಧಾರಗಳನ್ನು ನಿರೂಪಿಸುವ ಸಭೆ ಇದಾಗಿದೆ. ಸಭೆಯಲ್ಲಿ ಸಂಘಟನೆಯ ಚಟುವಟಿಕೆಗಳ ಕುರಿತು ವಿಮರ್ಶಾತ್ಮಕ ಚರ್ಚೆ ನಡೆಯಲಿದ್ದು, ಮುಂದಿನ ಸಂಘಟನಾ ಕಾರ್ಯತಂತ್ರಗಳ ಬಗ್ಗೆ ಚರ್ಚೆಯಾಗಲಿದೆ ಎಂದರು. ಸರಸಂಘಚಾಲಕ್ ಡಾ.ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ಹಿರಿಯ ಪದಾಧಿಕಾರಿಗಳು, ಸಂಘದ ವಿವಿಧ ಕ್ಷೇತ್ರಗಳ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ಭಾಗವಹಿಸಲಿದ್ದಾರೆ ಎಂದವರು ವಿವರಿಸಿದರು.
ಮೂರು ದಿನ ಅಖಿಲ ಭಾರತೀಯ ಪ್ರತಿನಿಧಿ ಸಭೆ ನಡೆಯಲಿದೆ. ಸಂಘಕ್ಕೆ ಈ ವರ್ಷದ ವಿಜಯ ದಶಮಿ ದಿನದಡ್ನದು 100 ವರ್ಷ ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ಪ್ರಮುಖ ಕಾರ್ಯಕ್ರಮಗಳ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಅಂಬೇಕರ್ ತಿಳಿಸಿದರು.