ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ಗ್ರಾಮ ವಾಸ್ತವ್ಯ ಮಾಡಿದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮಕ್ಕೀಗ ಅಭಿವೃದ್ಧಿ ಶಕೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು 2020 ಜನವರಿ 5 ರಂದು ಮಡಪ್ಪಾಡಿಯಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗಿತ್ತು. ಸಚಿವರು, ಸಂಸದರು, ಶಾಸಕರು ಸೇರಿ ಜನಪ್ರತಿನಿಧಿಗಳು ಹಾಗು ಜಿಲ್ಲಾಧಿಕಾರಿ ಸೇರಿ ಅಧಿಕಾರಿಗಳು ಭಾಗವಹಿಸಿದ ಗ್ರಾಮ ವಾಸ್ತವ್ಯದಲ್ಲಿ ಜನರು ಗ್ರಾಮದ ಪ್ರಮುಖ ಬೇಡಿಕೆಗಳನ್ನು ಮಂಡಿಸಲಾಗಿತ್ತು. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರಾದ ಎಸ್.ಅಂಗಾರ ಮತ್ತು ಕೆ.ಎಸ್.ಈಶ್ವರಪ್ಪ ಹಲವು ಅಭಿವೃದ್ಧಿಗೆ ಅನುದಾನ ಒದಗಿಸಿದ್ದಾರೆ.ಮಡಪ್ಪಾಡಿ ಗ್ರಾಮವನ್ನು ಸಂಪರ್ಕಿಸುವ ಸೇವಾಜೆ- ಮಡಪ್ಪಾಡಿ ರಸ್ತೆ ಅಭಿವೃದ್ಧಿಗೆ ಪಂಚಾಯತ್ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್.ಈಶ್ವರಪ್ಪ 1.5 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಇದೀಗ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಸಚಿವ ಎಸ್. ಅಂಗಾರ ಅವರು ಗ್ರಾಮದ ಪ್ರಮುಖ ಬೇಡಿಕೆಯಾದ ಮಡಪ್ಪಾಡಿ- ಹಾಡಿಕಲ್ಲು ರಸ್ತೆಗೆ 80 ಲಕ್ಷ ಅನುದಾನ ಒದಗಿಸಿದ್ದಾರೆ. ಅದರ ಶಂಕುಸ್ಥಾಪನೆ ಜ.12ರಂದು ನಡೆಯಲಿದೆ. ಇನ್ನೊಂದು ಬೇಡಿಕೆ ಎಳುವೆ ಸೇತುವೆಗೆ ಒಂದು ಕೋಟಿ ಅನುದಾನ ಮಂಜೂರಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಸೇವಾಜೆ-ಮಡಪ್ಪಾಡಿ- ಗುತ್ತಿಗಾರು ರಸ್ತೆಯನ್ನು ಲೋಕೋಪಯೋಗಿ ರಸ್ತೆಯಾಗಿ ಮೇಲ್ದರ್ಜೆಗೇರಿಸಲಾಗಿದೆ. ಈ ರಸ್ತೆಯ ಉಳಿದ ಭಾಗದ ಅಭಿವೃದ್ಧಿಗೆ ಆದ್ಯತೆಯ ಮೇರೆಗೆ ಅನುದಾನ ಒದಗಿಸುವುದಾಗಿ ಸಚಿವರು ತಿಳಿಸಿದ್ದಾರೆ. ಸುಬ್ರಹ್ಮಣ್ಯ-ಎಲಿಮಲೆ- ಅರಂತೋಡು ರಸ್ತೆ ಅಭಿವೃದ್ಧಿಗೆ ಭಾರತ್ಮಾಲಾ ಯೋಜನೆಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದಕ್ಕಿಂತ ಮೊದಲು ರಸ್ತೆ ದುರಸ್ತಿಗೆ ಪೂರಕ ಅನುದಾನ ಒದಗಿಸಲಾಗುವುದು. ರಸ್ತೆಯಲ್ಲಿ 2.5 ಕೋಟಿ ರೂ ವೆಚ್ಚದಲ್ಲಿ ಸೇವಾಜೆ ಸೇತುವೆಯ ಕಾಮಗಾರಿ ಆರಂಭಗೊಂಡಿದೆ ಎಂದು ಸಚಿವ ಅಂಗಾರ ತಿಳಿಸಿದರು. ಪತ್ರಕರ್ತರು, ಜನರು ಮುಂದಿರಿಸಿದ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನ ನಡೆಸುವುದಾಗಿ ಸಚಿವ ಅಂಗಾರ ಭರವಸೆ ನೀಡಿದ್ದಾರೆ.