ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಕಾಯಕಲ್ಪ ನೀಡಿ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬ್ಲಾಕ್ ಮಟ್ಟದಲ್ಲಿ ಪಕ್ಷವನ್ನು ಪುನರ್ ರಚನೆ ಮಾಡಬೇಕಿದೆ. ಹೀಗಿರುವ ಅಧ್ಯಕ್ಷರುಗಳು ಬಹಳ ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದಾರೆ. ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕಿದೆ. ಕೆಲವರಿಗೆ ಬಡ್ತಿ ನೀಡಬೇಕು. ಮತ್ತೆ ಕೆಲವರಿಗೆ ಜವಾಬ್ದಾರಿ ನೀಡಬೇಕಿದೆ ಎಂದವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗೆ ನ್ಯಾಯಾಲಯ ಯಾವಾಗ ಬೇಕಾದರೂ ಸೂಚನೆ ನೀಡಬಹುದು. ಅವುಗಳಿಗೆ ತಯಾರಿ ಮಾಡಿಕೊಳ್ಳಬೇಕು. ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ. ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ನಿಷ್ಕ್ರಿಯರಾಗಿರುವವರ ಬದಲಾವಣೆ ಖಚಿತ ಎಂಬ ಸುಳಿವನ್ನೂ ಡಿಕೆಶಿ ನೀಡಿದರು. ಯಾರು ಕಾರ್ಯೋನ್ಮುಖರಾಗಿಲ್ಲ ಅಂತಹವರನ್ನು ಖಂಡಿತವಾಗಿ ಬದಲಾಯಿಸಲಾಗುವುದು. ಇತ್ತೀಚೆಗೆ ನಡೆದ ಸಿಎಲ್ ಪಿ ಸಭೆಯಲ್ಲೂ ನಾನು ಈ ವಿಚಾರ ಹೇಳಿದ್ದೇನೆ. ಕಾಂಗ್ರೆಸ್ ಕಚೇರಿ ಕಡ್ಡಾಯವಾಗಿ ಇರಬೇಕು. ಶಾಸಕರ ಮನೆಯಲ್ಲಿ ಪಕ್ಷದ ಸಭೆ ಮಾಡುವಂತಿಲ್ಲ. ಮನೆಯಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿ. ಆದರೆ ಪಕ್ಷದ ಸಭೆಗಳು ಪಕ್ಷದ ಕಚೇರಿಯಲ್ಲೇ ಆಗಬೇಕು. ಇನ್ನು ಅಧಿವೇಶನದ ಬಳಿಕ ಇಬ್ಬರು ಮಂತ್ರಿಗಳು ಬಂದು ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಎಂದರು.
ಎಲ್ಲಾ ಕಡೆಗಳಲ್ಲಿ ಸಮಿತಿಗಳ ರಚನೆಗೆ ಸೂಚನೆ ನೀಡಲಾಗಿದೆ. ವಿವಿಧ ಸರ್ಕಾರಿ ಸಮಿತಿಗಳಲ್ಲಿ ನಾಮನಿರ್ದೇಶನ ವಿಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಅವಕಾಶ ನೀಡಲಾಗುವುದು ಹಾಗೂ ಸಾಮಾಜಿಕ ನ್ಯಾಯದ ಮಾನದಂಡ ಆಧಾರದ ಮೇಲೆ ಮಾಡಲಾಗುವುದು” ಎಂದು ತಿಳಿಸಿದ ಡಿಕೆಶಿ, ನಿಗಮ ಮಂಡಳಿ ನೇಮಕ ವಿಚಾರವಾಗಿ ಪರಮೇಶ್ವರ್ ಅವರ ನೇತೃತ್ವದಲ್ಲಿ ದೊಡ್ಡ ಸಮಿತಿ ರಚಿಸಲಾಗಿದೆ. ನಮ್ಮ ಬಳಿ 7-8 ಸಾವಿರ ಅರ್ಜಿಗಳು ಬಂದಿವೆ. ಅರ್ಜಿಗಳು ಬಾರದಿದ್ದರೂ ಹಳ್ಳಿಗಳಲ್ಲಿ ಬಲಿಷ್ಠವಾಗಿರುವ ಕಾರ್ಯಕರ್ತರನ್ನು ಗಮನಿಸಬೇಕು ಎಂದು ನಿರ್ದೇಶನ ನೀಡಿದ್ದೇವೆ ಎಂದು ತಿಳಿಸಿದರು