ಬೆಂಗಳೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಬಿಬಿಎಂಪಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತ ಉಪಸ್ಥಿತರಿದ್ದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಾಲಾ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡುವ ಜೊತೆಗೆ ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಗುವುದು. ಅದರಂತೆ ಅತಿ ಹೆಚ್ಚು ಅಂಕ ಪಡೆದಿರುವ 12 ವಿದ್ಯಾರ್ಥಿಗಳಿಗೆ ನಗದು ಹಾಗೂ ಪ್ರಶಸ್ತಿಪತ್ರ ಮತ್ತು ಪಾರಿತೋಷಕ ನೀಡಿ ಗೌರವಿಸಲಾಯಿತು.
ಇದೇ ಮೊದಲ ಬಾರಿಗೆ ಮಹಾ ನಗರ ಪಾಲಿಕೆಯಿಂದ ಅತ್ಯುತ್ತಮ ಶಿಕ್ಷಕರನ್ನು ಗುರುತಿಸಿ ಅವರಿಗೆ “ಉತ್ತಮ ಶಿಕ್ಷಕ” ಪ್ರಶಸ್ತಿ ಪತ್ರದೊಂದಿಗೆ 50,000 ರೂ.ಗಳ ನಗದು ಬಹುಮಾನ, ಪಾರಿತೋಷಕ ನೀಡಿ ಸನ್ಮಾನಿಸಲಾಯಿತು. ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಒಟ್ಟು 60 ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ತಲಾ 25,000 ರೂ. ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಒಟ್ಟು 62 ವಿದ್ಯಾರ್ಥಿಗಳಿಗೆ ತಲಾ 35,000 ರೂ.ಗಳನ್ನೊಳಗೊಂಡ ನಗದು ಹಾಗೂ ಪ್ರಶಸ್ತಿಪತ್ರ ಮತ್ತು ಪಾರಿತೋಷಕ ನೀಡಿ ಗೌರವಿಸಲಾಯಿತು.