ಬೆಂಗಳೂರು: ಹಿರಿಯ ಮುಖಂಡ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ವಿಧಿವಶರಾಗಿದ್ದಾರೆ. ತೀವ್ರ ಹೃದಯಾಘಾತ ಕ್ಕೊಳಗಾಗಿದ್ದ ಅವರu ಕಳೆದ ರಾತ್ರಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಉಮೇಶ್ ಕತ್ತಿ ನಿಧನದ ಸುದ್ದಿ ತಿಳಿದು ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದರು. ಸಚಿವರ ನಿಧನ ಬಗ್ಗೆ ಅವರ ಸಂಪುಟ ಸಹೋದ್ಯೋಗಿಗಳು ಹಾಗೂ ಬಿಜೆಪಿ ನಾಯಕರು ಶೋಕ ವ್ಯಕ್ತಪಡಿಸಿದ್ದಾರೆ.
ಸಚಿವರ ಕಂಬನಿ:
ಉಮೇಶ್ ಕತ್ತಿ ಅವರ ನಿಧನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕಂಬನಿ ಮಿಡಿದಿದ್ದಾರೆ. ನಮ್ಮ ಸಂಪುಟದ ಕ್ರಿಯಾಶೀಲ ಸಚಿವರಾಗಿದ್ದ ಅವರು ಇತ್ತೀಚಿಗೆ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆ ತರುವ ಮೂಲಕ ಜನಸ್ನೇಹಿಯಾಗಿದ್ದರು. ಆದರೆ, ಇಷ್ಟು ಬೇಗ ಇಂತಹ ದುರ್ಘಟನೆ ನಡೆಯುತ್ತದೆ ಎಂದು ಕನಸಿನಲ್ಲೂ ಉಹಿಸಿರಲಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ನಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಅವರು, ಬಳಿಕ ಜನತಾದಳ, ಜೆಡಿಎಸ್, ನಂತರ ಬಿಜೆಪಿಗೆ ಸೇರಿ ಒಟ್ಟು 8 ಬಾರಿ ಶಾಸಕರಾಗಿ ಸಚಿವರಾಗಿದ್ದುದು ಅವರ ಜನಪ್ರಿಯತೆಗೆ ಹಿಡಿದ ಕೈ ಗನ್ನಡಿ ಎಂದು ಬಣ್ಣಿಸಿದ್ದಾರೆ.
ಬಂಧೀಖಾನೆ, ತೋಟಗಾರಿಕೆ, ಕೃಷಿ, ಅರಣ್ಯ ಆಹಾರ ಮತ್ತು ನಾಗರಿಕ ಪೂರೈಕೆ ಹೀಗೆ ಹಲವಾರು ಇಲಾಖೆಯ ಸಚಿವರಾಗಿದ್ದ ಕತ್ತಿ ಅವರು, ಜನೋಪಯೋಗಿ ಹಾಗೂ ಜನಪರ ಕೆಲಸ ಮಾಡಿ, ಸರ್ಕಾರ ಮತ್ತು ಪಕ್ಷಕ್ಕೂ ಉತ್ತಮ ಹೆಸರು ತಂದುಕೊಡುತ್ತಿದ್ದರೆಂದು ಸ್ಮರಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಪ್ರಭಾವಿ ಮುಖಂಡರಾಗಿದ್ದ ಅವರು, ಬಿಜೆಪಿಗೆ ಸೇರ್ಪಡೆಯಾದ ನಂತರ ಕಿತ್ತೂರು ಕರ್ನಾಟಕದಲ್ಲಿ ಸಂಘಟನೆಗೆ ಹೆಚ್ಚು ಒತ್ತು ಕೊಟ್ಡಿದ್ದರು. ಇದರ ಪರಿಣಾಮವಾಗಿ ಈ ಭಾಗದಲ್ಲಿ ಪಕ್ಷ ಬೇರು ಮಟ್ಟದಲ್ಲಿ ಪ್ರಬಲವಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ರಾಜ್ಯವು ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ
ನೀಡಲಿ ಎಂದು ಸಚಿವ ನಿರಾಣಿ ಪ್ರಾರ್ಥಿಸದ್ದಾರೆ.
























































