ಬೆಂಗಳೂರು: ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ವೈಜ್ಞಾನಿಕ ಹಾಗೂ ಪ್ರಗತಿಪರ ಚಿಂತನೆ ಹೊಂದಿರುವ ಸತೀಶ್ ಜಾರಕಿಹೊಳಿ ಅವರು ನಾಯಕತ್ವ ವಹಿಸಬಹುದು ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತವೇ ಎಂಬ ಪ್ರಶ್ನೆಯನ್ನು ಇದು ಹುಟ್ಟುಹಾಕಿದೆ.
ಯತೀಂದ್ರರ ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವಂತೆಯೇ, ಸ್ಪಷ್ಟನೆ ನೀಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯೇ ಇಲ್ಲ. ಹೈಕಮಾಂಡ್ ಇದನ್ನು ಸ್ಪಷ್ಟಪಡಿಸಿದೆ’ ಎಂದಿದ್ದಾರೆ.
ರಾಜ್ಯ ನಾಯಕತ್ವ ಬದಲಾವಣೆಯ ಕುರಿತಂತೆ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಮಂತ್ರಾಲಯ ಪ್ರವಾಸದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, “ಯತೀಂದ್ರ ಏನು ಹೇಳಿದ್ದಾರೆ ಎನ್ನುವುದರ ಬಗ್ಗೆ ಮಾಹಿತಿ ಇಲ್ಲ” ಎಂದರು.
“ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು ಪಕ್ಷದ ಅಧ್ಯಕ್ಷನೂ, ಉಪಮುಖ್ಯಮಂತ್ರಿಯೂ ಆಗಿದ್ದೇನೆ. ನನ್ನ ಮೇಲೆ ಪಕ್ಷ ಪ್ರಮುಖ ಜವಾಬ್ದಾರಿಗಳನ್ನು ವಹಿಸಿದೆ. ನನಗೆ ಪಕ್ಷದಿಂದ ಅತಿಯಾಗಿ ಸಿಕ್ಕಿದೆ,” ಎಂದು ಅವರು ಹೇಳಿದರು.
ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ತಂದೆ ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ ಎಂದು ಹೇಳಿ, “ಮುಂದಿನ ದಿನಗಳಲ್ಲಿ ವೈಜ್ಞಾನಿಕ ಹಾಗೂ ಪ್ರಗತಿಪರ ಚಿಂತನೆ ಹೊಂದಿರುವ ಸತೀಶ್ ಜಾರಕಿಹೊಳಿ ಅವರು ನಾಯಕತ್ವ ವಹಿಸಬಹುದು,” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಬಳಿಕ, ಯತೀಂದ್ರ ಅವರು ಸ್ಪಷ್ಟನೆ ನೀಡುತ್ತಾ, “ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯೇ ಇಲ್ಲ. ಹೈಕಮಾಂಡ್ ಇದನ್ನು ಸ್ಪಷ್ಟಪಡಿಸಿದೆ. ಚುನಾವಣೆ ಮುನ್ನ ಬಿಜೆಪಿ ಇಂತಹ ಸುಳ್ಳು ಪ್ರಚಾರ ನಡೆಸುತ್ತದೆ. ಆದರೆ ಪಕ್ಷದೊಳಗಿನ ನಿಜ ಸ್ಥಿತಿ ನಮಗೆ ಗೊತ್ತು,” ಎಂದಿದ್ದರು.
“ನಾಯಕತ್ವ ಬದಲಾವಣೆ ಕುರಿತಂತೆ ಯಾವುದೇ ಚರ್ಚೆಯೇ ನಡೆದಿಲ್ಲ. ಹೈಕಮಾಂಡ್ ಈ ವಿಷಯವನ್ನು ಹಲವು ಬಾರಿ ಸ್ಪಷ್ಟಪಡಿಸಿದೆ,” ಎಂದು ಅವರು ಪುನರುಚ್ಚರಿಸಿದರು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂದು ಉಪಮುಖ್ಯಮಂತ್ರಿ ಶಿವಕುಮಾರ್ ಹೇಳಿದರು. “ಪಕ್ಷದ ಕಾರ್ಯಕರ್ತರು ಪಕ್ಷದ ನಿಷ್ಠೆಯಿಂದ ಕೆಲಸ ಮಾಡಬೇಕು. ಗುಂಪುಗಾರಿಕೆಗೆ ನಾವು ಅವಕಾಶ ನೀಡಿಲ್ಲ. ನಾನು ಬಯಸಿದರೆ ಗುಂಪುಗಾರಿಕೆ ಮಾಡಬಹುದಿತ್ತು, ಆದರೆ ಅದರಿಂದ ಯಾವುದೇ ಪ್ರಯೋಜನವಿಲ್ಲ,” ಎಂದು ಅವರು ಸಮರ್ಥಿಸಿಕೊಂಡರು.