ಬೆಂಗಳೂರು: ಬಿಜೆಪಿ ನಾಯಕರು ಸಿಡಿ ವಿಚಾರ ಮುಂದಿಟ್ಟು ವಾಗ್ವಾದದಲ್ಲಿ ತೊಡಗಿದ್ದಾರೆ, ಈ ಸಂಗತಿ ಮುಂದಿಟ್ಟು ಲಾಭ ಗಳಿಸಲು ಕೈ ನಾಯಕರು ಮುಂದಾಗಿದ್ದಾರೆ. ಈ ಸಿಡಿ ವಿಚಾರ ಕುರಿತಂತೆ ತನಿಖೆಗೆ ಒತ್ತಾಯಿಸುವ ಮೂಲಕ ರಾಜ್ಯ ರಾಜಕಾರಣದ ವಿದ್ಯಮಾನಗಳಿಗೆ ರೋಚಕತೆ ಬಂದಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿಯ ಹಿರಿಯ ನಾಯಕ. ಸಿ.ಡಿ. ಕುರಿತಾಗಿ ಅವರೇ ಆರೋಪ ಮಾಡಿದ್ದಾರೆ. ಭ್ರಷ್ಟಾಚಾರ ಆರೋಪ ಹಾಗೂ ಆಕ್ಷೇಪಾರ್ಹ ವೀಡಿಯೊಗಳು ಇವೆ ಎನ್ನುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ತನಿಖೆ ನಡೆಸಬೇಕೆಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯತ್ನಾಳ್ ಅವರು ಸಿ.ಡಿ.ಯಲ್ಲಿ ನೋಡಲಾಗದ ದೃಶ್ಯಗಳಿವೆ. ನೋಡಲಾಗದು ಎಂದಿದ್ದಾರೆ. ಹೀಗಾಗಿ ಸಿ.ಡಿ.ಯಲ್ಲಿ ಏನಿದೆ ಎಂಬುದೂ ಜನರಿಗೆ ಗೊತ್ತಾಗಬೇಕಿದೆ ಎಂದರು. ಯಡಿಯೂರಪ್ಪ ಅವರಿಗೆ ಏಕೆ ಮತ್ತು ಹೇಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂಬ ಸತ್ಯಾಂಶವೂ ಹೊರಬರಬೇಕಲ್ಲವೇ? ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಸಿ.ಪಿ. ಯೋಗೇಶ್ವರ್ ಅವರು 9 ಕೋಟಿ ಸಾಲ ಮಾಡಿ ಸರ್ಕಾರ ರಚನೆಗೆ ನೆರವಾಗಿದ್ದಾರೆ ಸಚಿವ ಎಂದು ಜಾರಕಿಹೊಳಿಯವರು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಾರೆ. ಆಪರೇಷನ್ ಕಮಲದಲ್ಲಿ ಹಣದ ಪ್ರಭಾವ ಇರುವುದು ಜಾರಕಿಹೊಳಿ ಹೇಳಿಕೆಯಿಂದ ಸಾಬೀತಾಗಿದೆ. ಹೀಗಾಗಿ ಅವರ ಹೇಳಿಕೆ ಕುರಿತು ಸಮಗ್ರ ತನಿಖೆ ಆಗಲೇಬೇಕು ಎಂದು ಸಿದ್ದರಾಮಯ್ಯ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
























































